ನವದೆಹಲಿ (ಪಿಟಿಐ): ಅಕ್ರಮ ಆಸ್ತಿ ಸಂಗ್ರಹಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ನಾಲ್ಕು ತಿಂಗಳು ಜಾಮೀನು ವಿಸ್ತರಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ತಮ್ಮನ್ನು ತಪ್ಪಿತಸ್ಥೆ ಎಂದು ಘೋಷಿಸಿ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಯಲಲಿತಾ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ವಿಶೇಷ ಪೀಠವೊಂದನ್ನು ಸ್ಥಾಪಿಸುವಂತೆಯೂ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ನ್ಯಾಯಪೀಠ ಸೂಚಿಸಿದೆ.
ನಿತ್ಯವೂ ವಿಚಾರಣೆ ನಡೆಸಿ ಮೂರು ತಿಂಗಳೊಳಗಾಗಿ ಈ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಮುಖ್ಯನ್ಯಾಯಮೂರ್ತಿ ಎಚ್.ಎಲ್. ದತ್ತು ಹಾಗೂ ನ್ಯಾ. ಎ.ಕೆ. ಸಿಕ್ರಿ ಅವರನ್ನೊಳಗೊಂಡ ಪೀಠ ಕರ್ನಾಟಕ ಹೈಕೋರ್ಟ್ಗೆ ಸೂಚಿಸಿದೆ.
ಜಯಲಲಿತಾ ಅವರಿಗೆ ಅಕ್ಟೋಬರ್ 17ರಂದು ನೀಡಿದ್ದ ಜಾಮೀನನ್ನು ಮತ್ತೂ ನಾಲ್ಕು ತಿಂಗಳು ಅಂದರೆ ಏಪ್ರಿಲ್ 18ರವರೆಗೆ ವಿಸ್ತರಿಸುವುದಾಗಿ ನ್ಯಾಯಪೀಠ ತಿಳಿಸಿತು.