ನವದೆಹಲಿ: ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಅಬ್ದುಲ್ ನಾಸೀರ್ ಮದನಿ ಜಾಮೀನನ್ನು ಶುಕ್ರವಾರ ಇನ್ನೂ ಒಂದು ತಿಂಗಳು ವಿಸ್ತರಿಸಿದ ಸುಪ್ರೀಂ ಕೋರ್ಟ್, ಊರು ಬಿಟ್ಟು ಹೋಗಬಾರದು ಎಂದು ಷರತ್ತು ಹಾಕಿತು.
ನ್ಯಾ.ಚಲಮೇಶ್ವರ ಮತ್ತು ನ್ಯಾ.ಎ.ಕೆ. ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ ಮದನಿ ಜಾಮೀನನ್ನು ಇನ್ನೂ ಒಂದು ತಿಂಗಳು ವಿಸ್ತರಿಸಿತು. ಆದರೆ, ಆಯುರ್ವೇದ ಚಿಕಿತ್ಸೆಗಾಗಿ ಕೇರಳಕ್ಕೆ ಹೋಗಲು ಅನುಮತಿ ನೀಡುವಂತೆ ಮಾಡಿದ ಮನವಿ ತಳ್ಳಿಹಾಕಿತು.
ರಾಜ್ಯದ ಪರ ಹಾಜರಾದ ಹಿರಿಯ ವಕೀಲ ರಾಜು ರಾಮಚಂದ್ರನ್, ಮದನಿ ಅತ್ಯಾಧುನಿಕ ಸೌಲಭ್ಯಗಳಿರುವ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಚಿಕಿತ್ಸೆಗಾಗಿ ಕೇರಳಕ್ಕೆ ಹೋಗುವುದಾಗಿ ಹೇಳುತ್ತಿರುವ ವಾದದಲ್ಲಿ ಯಾವುದೇ ಸಕಾರಣವೂ ಕಾಣುತ್ತಿಲ್ಲ ಎಂದು ಪ್ರತಿಪಾದಿಸಿದರು.
ಈಗಿನ ಪರಿಸ್ಥಿತಿಯಲ್ಲಿ ಮದನಿ ಕೇರಳಕ್ಕೆ ಹೋಗುವ ಅಗತ್ಯ ಕಾಣುತ್ತಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಾಮೀನು ಅವಧಿಯನ್ನು ಇನ್ನೂ ಒಂದು ತಿಂಗಳು ವಿಸ್ತರಿಸುವುದಾಗಿ ನ್ಯಾಯಾಲಯ ಹೇಳಿತು.
2008ರಲ್ಲಿ ಬೆಂಗಳೂರಿನಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಮದನಿ ಪ್ರಮುಖ ಆರೋಪಿಯಾಗಿದ್ದಾನೆ.