ಬೆಂಗಳೂರು: ಬಿಬಿಎಂಪಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ, ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನಡುವಿನ ಅಸಮಾಧಾನ ಮತ್ತೊಮ್ಮೆ ಬಯಲಾಗಿದೆ.
ಸೋಮವಾರ ಸಂಪುಟ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಮೈತ್ರಿ ಬಗ್ಗೆ ನನಗೇನೂ ಗೊತ್ತಿಲ್ಲ. ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಿನಿಮಾದ ನಂಟಿದೆ. ಒಳ್ಳೆಯ ನಿರ್ಮಾಪಕರು. ಸಖತ್ ಡೈಲಾಗ್ ಹೊಡೆಯುತ್ತಾರೆ. ಅವರಿಗೇ ಎಲ್ಲಾ ಗೊತ್ತಿದೆ’ ಎಂದು ಹೇಳುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದರು.
‘ನಮಗೆ ಯಾರ ಸಹವಾಸವೂ ಬೇಡ’ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಕೆ.ಜೆ.ಜಾರ್ಜ್, ‘ನಮ್ಮ ಸಹವಾಸ ಮಾಡಿ ಎಂದು ನಾವೇನೂ ಹೇಳಿಲ್ಲ. ನಾವು ಮೈತ್ರಿಯ ಪ್ರಸ್ತಾಪ ಮಾಡಿಲ್ಲ’ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ‘ಹೌದು, ನಾನು ಒಳ್ಳೆಯ ನಿರ್ಮಾಪಕ ಹಾಗೂ ನಿರ್ದೇಶಕ. ಒಳ್ಳೆಯ ನಾಯಕರನ್ನು ಸೃಷ್ಟಿಸುತ್ತೇನೆ. ಬೇಕಾದರೆ ಖಳನಾಯಕರನ್ನೂ ಸೃಷ್ಟಿಸುತ್ತೇನೆ’ ಎಂದು ತಿರುಗೇಟು ನೀಡಿದರು.