ಬೆಂಗಳೂರು: ರಾಜ್ಯ ವಿಧಾನಸಭೆಗೆ 2013ರಲ್ಲಿ ನಡೆದ ಚುನಾವಣೆ ವೇಳೆ ಟಿ. ನರಸೀಪುರ ಕ್ಷೇತ್ರದ ಮತ ಎಣಿಕೆ ಕ್ರಮಬದ್ಧವಾಗಿ ನಡೆದಿಲ್ಲ ಎಂದು ದೂರಿ ಪರಾಜಿತ ಅಭ್ಯರ್ಥಿ, ಜೆಡಿಎಸ್ನ ಎಂ.ಸಿ. ಸುಂದರೇಶನ್ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
‘ಆ ಕ್ಷೇತ್ರದ ಮತಗಳ ಮರು ಎಣಿಕೆಗೆ ಆದೇಶಿಸಬೇಕು’ ಎಂದು ಸುಂದರೇಶನ್ ಅರ್ಜಿಯಲ್ಲಿ ಕೋರಿದ್ದರು. ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿ ವಿಜೇತ ಅಭ್ಯರ್ಥಿ, ಕಾಂಗ್ರೆಸ್ಸಿನ ಡಾ.ಎಚ್.ಸಿ. ಮಹದೇವಪ್ಪ ಅವರು ಮಧ್ಯಾಂತರ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಮಧ್ಯಾಂತರ ಅರ್ಜಿ ಮಾನ್ಯ ಮಾಡಿ, ಸುಂದರೇಶನ್ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿ ಆದೇಶಿಸಿದರು.