ನವದೆಹಲಿ (ಪಿಟಿಐ): ಬದಾಯೂಂ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಬೇಕೆಂಬ ಉತ್ತರಪ್ರದೇಶ ಸರ್ಕಾರದ ಕೋರಿಕೆಯನ್ನು ಸಿಬಿಐ ಮಂಗಳವಾರ ಸ್ವೀಕರಿಸಿದೆ.
ಪ್ರಕರಣವನ್ನು ಆದಷ್ಟು ಬೇಗ ತನಿಖೆಗೆ ಕೈಗೆತ್ತಿಕೊಳ್ಳಲಿರುವ ಸಿಬಿಐ, ಈ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಔಪಚಾರಿಕ ಅಧಿಸೂಚನೆಗಾಗಿ ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅಧಿಕಾರಿಗಳಿಗೆ ಅಖಿಲೇಶ್ ಸೂಚನೆ (ಲಖನೌ ವರದಿ): ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬದಾಯೂಂ ಮತ್ತು ಕನೌಜ್ ಅತ್ಯಾಚಾರ ಪ್ರಕರಣಗಳಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದ್ದಾರೆ.
ಮಂಗಳವಾರ ಉನ್ನತ ಆಡಳಿತಾಂಗ ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಭ್ರಷ್ಟ ಮತ್ತು ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.ಈ ಮಧ್ಯೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಆದ್ಯತೆ ಆಗಿದ್ದು, ಮಹಿಳೆಯರ ವಿರುದ್ಧ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮುಖ್ಯ ಕಾರ್ಯದರ್ಶಿ ಅಲೋಕ್ ರಂಜನ್ ಸೂಚಿಸಿದ್ದಾರೆ.
ಬಿಎಸ್ಪಿ ಸಭಾತ್ಯಾಗ: ಉತ್ತರಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದ್ದು, ಅಲ್ಲಿನ ಸರ್ಕಾರ ವಜಾಗೊಳಿಸಬೇಕು ಎಂದು ಆರೋಪಿಸಿ ಬಹುಜನಸಮಾಜ ಪಕ್ಷದ ಸಂಸದರು ಮಂಗಳವಾರ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಕುರಿತು ಸಭಾಧ್ಯಕ್ಷರು ಯಾವುದೇ ಚರ್ಚೆಗೆ ಅವಕಾಶ ನೀಡದೇ ಇದ್ದಾಗ ಪಕ್ಷದ ನಾಯಕಿ ಮಾಯಾವತಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.
ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ
ಮುಜಪ್ಫರ್ನಗರ (ಪಿಟಿಐ): ಇಬ್ಬರು ಅಪರಿಚಿತ ವ್ಯಕ್ತಿಗಳು ಮಿರ್ಪುರ್ ಪಟ್ಟಣ ಬಿಜೆಪಿ ಘಟಕದ ಉಪಾಧ್ಯಕ್ಷ, ನಿವೃತ್ತ ಸೈನಿಕ ಓಂ ವೀರ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.ಬೆಳಿಗ್ಗೆ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿಗೆ ಬಂದ ದುಷ್ಕರ್ಮಿಗಳು ನಾಡ ಬಂದೂಕಿನಿಂದ ಸಿಂಗ್ ಅವರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಗೆ ಪ್ರತಿಯಾಗಿ ಸಿಂಗ್ ತಮ್ಮ ಬಳಿಯಿದ್ದ ರಿವಾಲ್ವರ್ನಿಂದ ಗುಂಡು ಹಾರಿಸಿದಾಗ ಒಬ್ಬ ದುಷ್ಕರ್ಮಿ ಗಾಯಗೊಂಡಿದ್ದಾನೆ. ಇಬ್ಬರೂ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಹತ್ಯೆ ಖಂಡಿಸಿ ಸಿಂಗ್ ಸಂಬಂಧಿಕರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮತ್ತೊಂದು ಅತ್ಯಾಚಾರ, ಕೊಲೆ
ಲಖನೌ (ಐಎಎನ್ಎಸ್): ಅತ್ಯಾಚಾರ, ಹತ್ಯೆ ಪ್ರಕರಣಗಳ ಸರದಿ ಉತ್ತರ ಪ್ರದೇಶದಲ್ಲಿ ಮುಂದುವರಿದಿದೆ. ಬಿಜ್ನೂರ್ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಬ್ದಲ್ಪುರ್ ರೆಹ್ರಾ ಗ್ರಾಮದಲ್ಲಿ ಸೋಮವಾರ ಈ ಪ್ರಕರಣ ನಡೆದಿದೆ. ಅತ್ಯಾಚಾರ ನಡೆಸಿದ ನಂತರ ದುಷ್ಕರ್ಮಿಗಳು ಬಾಲಕಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.