ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡದಿದ್ದರೆ ಸೆಪ್ಟೆಂಬರ್ನಲ್ಲಿ ರಾಜ್ಯದಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಎಚ್ಚರಿಸಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 17,800 ಅತಿಥಿ ಉಪನ್ಯಾಸಕರ ವೇತನವನ್ನು ₨25 ಸಾವಿರಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಒದಗಿಸಬೇಕು. ಇಲ್ಲವಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಎದುರು ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ತಿಳಿಸಿದೆ.
ಉನ್ನತ ಶಿಕ್ಷಣ ಸಚಿವರು ಹೇಳಿದಂತೆ ವೇತನ ಹೆಚ್ಚಳ ಮಾಡಿಲ್ಲ. ಎರಡು–ಮೂರು ತಿಂಗಳ ವೇತನವನ್ನು ಇನ್ನೂ ನೀಡಿಲ್ಲ ಎಂದು ಸಂಘದ ಗೌರವ ಅಧ್ಯಕ್ಷ ಹಾಗೂ ಭಾರತ ಪ್ರಜಾಪ್ರಭುತ್ವ ಯುವಜನ ಫೆಡರೇಷನ್ ರಾಜ್ಯ ಕಾರ್ಯದರ್ಶಿ ಬಿ.ರಾಜಶೇಖರಮೂರ್ತಿ ಹೇಳಿದ್ದಾರೆ.
ಸಂಘದ ಪ್ರಮುಖ ಬೇಡಿಕೆಗಳು
*ಮಾಸಿಕ ವೇತನವನ್ನು ₨25 ಸಾವಿರಕ್ಕೆ ಹೆಚ್ಚಳ ಮಾಡಿ ಪ್ರತಿ ತಿಂಗಳೂ ಮೊದಲ ವಾರದಲ್ಲೇ ನೀಡಬೇಕು.
*ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಮುಂಬರುವ ಶೈಕ್ಷಣಿಕ ವರ್ಷಗಳಿಗೂ ಮುಂದುವರಿಸಿ ಸೇವಾ ಭದ್ರತೆ ಒದಗಿಸಬೇಕು. ಸೇವಾ ಹಿರಿತನದ ಆಧಾರದಲ್ಲಿ ಕಾರ್ಯಭಾರ ಹೆಚ್ಚಿಸಬೇಕು.
*ಹೊಸದಾಗಿ ನೇಮಕಾತಿ ಮಾಡಿಕೊಳ್ಳುವಾಗ ಅತಿಥಿ ಉಪನ್ಯಾಸಕರಾಗಿ ವಯೋಮಿತಿ ಮೀರುತ್ತಿರುವ ಮತ್ತು ಸೇವಾ ಹಿರಿತನದಲ್ಲಿರುವವರಿಗೆ ಆದ್ಯತೆ ಕೊಡಬೇಕು.
*ಮಹಿಳಾ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳು ವೇತನ ಸಹಿತ ಹೆರಿಗೆ ರಜೆ ನೀಡಬೇಕು.