ಬೆಂಗಳೂರು: ‘ತುರ್ತು ನಿರ್ಗಮನ ದ್ವಾರ ಅಳವಡಿಸಲು ಖಾಸಗಿ ಬಸ್ ಮಾಲೀಕರು ಉದಾಸೀನ ತೋರಿದರೆ ಅಂಥ ಬಸ್ಗಳ ಸಂಚಾರವನ್ನೇ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
‘ತುರ್ತು ನಿರ್ಗಮನ ದ್ವಾರ ಇಲ್ಲದಿದ್ದರೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಬಸ್ಗಳಿಗೆ ಅರ್ಹತಾ ಪ್ರಮಾಣಪತ್ರ ನೀಡುವುದಿಲ್ಲ. ಸುರಕ್ಷತೆ ವಿಷಯದಲ್ಲಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ’ ಎಂದರು.
‘ಹಿರಿಯೂರು ತಾಲ್ಲೂಕಿನ ಮೇಟಿಕುರ್ಕಿ ಬಳಿ ಅಪಘಾತಕ್ಕೀಡಾದ ಖಾಸಗಿ ಬಸ್ ಅಶೋಕ್ ಲೇಲ್ಯಾಂಡ್ ಕಂಪೆನಿಯದ್ದು. ಬಸ್ಗೆ ಸಂಬಂಧಿಸಿದ ದಾಖಲೆಗಳು ಸಮಪರ್ಕವಾಗಿವೆ. ಅಪಘಾತಕ್ಕೆ ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಣವಾಗಿದೆ. ಗಾಬರಿಗೊಂಡ ಚಾಲಕ ಬ್ರೇಕ್ ಹಾಕಿದಾಗ ಬಸ್ ಕಂದಕಕ್ಕೆ ಉರುಳಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.