ಲಖನೌ (ಪಿಟಿಐ): ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ಅವಹೇಳನ ಮಾಡಿದ ದಯಾಶಂಕರ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ಹಜರತ್ಜಂಗ್ನಲ್ಲಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಜರತ್ಜಂಗ್ನ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿರುವ ಬಿಎಸ್ಪಿ ಕಾರ್ಯಕರ್ತರು ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು ಸಾವಿರ ಮಂದಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಯಾಶಂಕರ, ‘ಮಾಯಾವತಿ ಅತಿ ಹೆಚ್ಚು ಹಣ ನೀಡುವವರಿಗೆ ಟಿಕೆಟ್ ನೀಡುತ್ತಿದ್ದಾರೆ. ಅವರ ಈ ವರ್ತನೆ ವೇಶ್ಯೆಗಿಂತಲೂ ಕೀಳು’ ಎಂದು ಹೇಳಿದ್ದರು.
ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪಕ್ಷದ ಹುದ್ದೆಗಳಿಂದ ದಯಾಶಂಕರ ಸಿಂಗ್ ಅವರನ್ನು ಬಿಜೆಪಿ ವಜಾಗೊಳಿಸಿತ್ತು. ದಯಾಶಂಕರ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.