ಕುಷ್ಟಗಿ: ತಾಲ್ಲೂಕಿನ ಮದಲಗಟ್ಟಿ ಗ್ರಾಮದ ಬಳಿ ನಿಡಶೇಸಿ ನೀರಾವರಿ ಕೆರೆ ಅಂಗಳ ಪ್ರದೇಶವನ್ನು ಅತಿಕ್ರಮಣ ಮಾಡಲಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಈ ಕೆರೆ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಬರುತ್ತಿದ್ದು, ಸುಮಾರು ಮೂರು ಎಕರೆ ಪ್ರದೇಶದಷ್ಟು ಜಮೀನನ್ನು ವಿಸ್ತರಿಸಿಕೊಂಡಿರುವ ಜಮೀನಿನ ಮಾಲೀಕರು ಕೆರೆಗೆ ಸಂಬಂಧಿಸಿದ ಪ್ರದೇಶವನ್ನು ಅತಿಕ್ರಮಣ ಮಾಡಿಕೊಂಡಿರುವುದು ಮತ್ತು ಕೆರೆಯ ಸುತ್ತಲೂ ನಿರ್ಮಿಸಲಾಗಿದ್ದ ರಸ್ತೆಯನ್ನೂ ಸಹ ಹಾಳು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಸಣ್ಣ ನೀರಾವರಿ ಇಲಾಖೆಗೆ ಸೇರಿದ ಪ್ರದೇಶ ಎಂಬ ಕಾರಣಕ್ಕೆ ಕುಷ್ಟಗಿ ಪುರಸಭೆ ಕೆರೆ ದಂಡೆ ಬಳಿ ಕೊಳವೆಬಾವಿಗಳನ್ನು ತೋಡಿದ್ದು. ಅಲ್ಲಿಂದ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಅತಿಕ್ರಮಣದಿಂದ ರಸ್ತೆ ಇಲ್ಲವಾಗಿದೆ. ಅಲ್ಲದೇ ಪುರಸಭೆಗೆ ಸೇರಿದ ಕೊಳವೆಬಾವಿ ಮತ್ತು ವಿದ್ಯುತ್ ಕಂಬಗಳೆಲ್ಲ ಅತಿಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ಉಳಿದುಕೊಂಡಿದ್ದು ನಿರ್ವಹಣೆ ಕೆಲಸಕ್ಕೆ ಅಡ್ಡಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ವಿಷಯ ಕುರಿತಂತೆ ಗುರುವಾರ ಸ್ಥಳಕ್ಕೆ ಭೇಟಿ ನೀಡಿದ್ದ ಪುರಸಭೆ ಮುಖ್ಯಾಧಿಕಾರಿ ಮಹಾದೇವ ಭೀಸೆ, ಸರ್ಕಾರದ ಕೊಳವೆಬಾವಿಗಳಿದ್ದ ಪ್ರದೇಶವನ್ನು ಒತ್ತುವರಿ ಮಾಡಿಕೊಳ್ಳಲಾಗಿದ್ದು ಈ ಬಗ್ಗೆ ಪರಿಶೀಲಿಸುವಂತೆ ಮಾಹಿತಿ ನೀಡಿದ್ದಾರೆ.
ಈ ಕಾರಣಕ್ಕೆ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಸಹ ಸ್ಥಳಕ್ಕೆ ಭೇಟಿ ನೀಡಿದ್ದು ಸರ್ವೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಭೀಸೆ ವಿವರಿಸಿದರು.
ಕುಡಿಯುವ ನೀರು ಪೂರೈಸುವ ಕೊಳವೆಬಾವಿ ಮತ್ತು ಪಂಪ್ಹೌಸ್ಗಳು ಸಹ ಸದ್ಯ ಒತ್ತುವರಿಯಾಗಿರುವ ಪ್ರದೇಶದಲ್ಲಿದ್ದು ದುರಸ್ತಿ ಮತ್ತಿತರೆ ನಿರ್ವಹಣೆ ಕೆಲಸ ಕಾರ್ಯಗಳಿಗೆ ಅನಾನುಕೂಲವಾಗುತ್ತದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಾಧಿಕಾರಿ ಹೇಳಿದರು.
ಈ ವಿಷಯ ಕುರಿತು ತಹಶೀಲ್ದಾರ್ ವೇದವ್ಯಾಸ ಮುತಾಲಿಕ್ ಅವರನ್ನು ಸಂಪರ್ಕಿಸಿದಾಗ ತಮಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದರು. ಆದರೆ ಕೆರೆ ಪ್ರದೇಶವನ್ನು ಅತಿಕ್ರಮಣಗೊಳಿಸಲಾಗುತ್ತಿದೆ ಎಂಬುದನ್ನು ಸಣ್ಣ ನೀರಾವರಿ ಇಲಾಖೆ ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.