ಬೀದರ್: ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಅವರ ಕುಟುಂಬದ ಪಿಂಚಣಿದಾರರಿಗೆ ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲಭ್ಯ ವಿಸ್ತರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಸಂಘದ ಅಧ್ಯಕ್ಷ ನಾಗೇಂದ್ರ ಬಲ್ಲೂರೆ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ದೇಶದಲ್ಲಿ ಸೈನಿಕರ ಜೊತೆಗೆ ಮಾಜಿ ಸೈನಿಕರಿಗೂ ಆರೋಗ್ಯ ಯೋಜನೆ, ಕ್ಯಾಂಟೀನ್ ಸೌಲಭ್ಯಗಳನ್ನು ಒದಗಿಸಲಾಗಿದೆ.
ಆದರೆ, ಸೇವಾನಿತರ ಪೊಲೀಸರಿಗೆ ಇರುವ ಸೌಕರ್ಯಗಳನ್ನು ಮಾತ್ರ ನಿವೃತ್ತರಿಗೆ ಕಲ್ಪಿಸಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ. ನಿವೃತ್ತ ಪೊಲೀಸ್ ಸಿಬ್ಬಂದಿ ಮಾದರಿಯಲ್ಲಿಯೇ ಪಿಂಚಣಿದಾರರ ಶವ ಸಂಸ್ಕಾರಕ್ಕೆ ಆರ್ಥಿಕ ಸಹಾಯ ನೀಡಬೇಕು.
ನಿವೃತ್ತ ಪೊಲೀಸರ ಕಲ್ಯಾಣ ನಿಧಿಗೆ ಆಯವ್ಯಯದಲ್ಲಿ ಪ್ರತಿ ವರ್ಷ ₹ 5 ಕೋಟಿ ಅನುದಾನ ಒದಗಿಸಬೇಕು. ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ನಿಯಮ 1975ಕ್ಕೆ ತಿದ್ದುಪಡಿ ತರುವುದರ ಮೂಲಕ ನಿವೃತ್ತ ಪೊಲೀಸರಿಗೂ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.