ನವದೆಹಲಿ (ಪಿಟಿಐ): ಬಿಕ್ಕಟ್ಟು ಬಗೆಹರಿಸಿಕೊಳ್ಳಲು ಹಾಗೂ ತ್ವರಿತ ನಿರ್ಧಾರಕ್ಕೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ತಮ್ಮನ್ನು ನೇರವಾಗಿ ಸಂಪರ್ಕಿಸುವಂತೆ ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸೂಚಿಸಿದ್ದಾರೆ.
ಇದೇ ಮೊದಲ ಬಾರಿ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಅವರು 3 ಗಂಟೆ ಸಭೆ ನಡೆಸಿದ ಸಂದರ್ಭದಲ್ಲಿ ಹೀಗೆ ಹೇಳಿದರು.
‘ನಿರ್ಧಾರಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನ ವಿಳಂಬವಾಗಬಾರದು. ಯಾವುದೇ ವಿಷಯಗಳಿಗೆ ಸಂಬಂಧಿಸಿ ಸಲಹೆ ಕೇಳುವುದಕ್ಕೆ ನನಗೆ ನೇರವಾಗಿ ಕರೆ ಅಥವಾ ಇ–ಮೆಲ್ ಮಾಡಿ’ ಎಂದು ಮೋದಿ ಹೇಳಿದ್ದಾಗಿ ಮೂಲಗಳು ತಿಳಿಸಿವೆ.
ಹಣಕಾಸು ಕಾರ್ಯದರ್ಶಿ ಅನಿಲ್ ಗೋಸ್ವಾಮಿ, ರಕ್ಷಣಾ ಕಾರ್ಯದರ್ಶಿ ರಾಧಾಕೃಷ್ಣ ಮಾಥೂರ್, ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಸೇರಿದಂತೆ 77 ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಇದ್ದರು.