ಬೆಂಗಳೂರು: ಪಂಡಿತ್ ಪುಟ್ಟರಾಜ ಗವಾಯಿ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಹಿತ ವೇದಿಕೆ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ವೇದಿಕೆ ಅಧ್ಯಕ್ಷ ಎಚ್.ಎಸ್. ಸೋಂಪೂರ ಮಾತನಾಡಿ, ‘ಪುಟ್ಟರಾಜ ಗವಾಯಿ ಅವರು ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ. ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.
ಗವಾಯಿ ಅವರು ಸಂಗೀತ ಮಾತ್ರವಲ್ಲದೇ ಸಾಹಿತ್ಯ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದಾರೆ. ಅವರು 30ಕ್ಕೂ ಕೃತಿಗಳನ್ನು ರಚಿಸಿದ್ದಾರೆ. ಸಾವಿರಾರು ಮಕ್ಕಳಿಗೆ ಸಂಗೀತವನ್ನು ಧಾರೆ ಎರೆದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಬೇಕು ಎಂದರು.
ರಾಜ್ಯದ ಸಂಸದರು, ಸಚಿವರು ಸಹ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ವೇದಿಕೆ ವತಿಯಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿ ಗವಾಯಿ ಅವರಿಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.