ಪುಣೆ(ಐಎಎನ್ಎಸ್): ಪುಣೆ ಸಮೀಪದ ಹಳ್ಳಿಯೊಂದರಲ್ಲಿ ಗುಡ್ಡ ಕುಸಿದ ಪರಿಣಾಮವಾಗಿ 50ಕ್ಕೂ ಹೆಚ್ಚು ಮನೆಗಳು ಮತ್ತು ಅನೇಕ ಜನರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
ದುರ್ಘಟನೆಯಲ್ಲಿ 5 ಜನರು ಸಾವನ್ನಪ್ಪಿದ್ದಾರೆ. ಗ್ರಾಮಸ್ಥರು, ಪೊಲೀಸರು, ಅಧಿಕಾರಿಗಳು ಮತ್ತು ಸೈನಿಕರು ಸಂರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪುಣೆಯ ಅಂಬೆಗಾಂವ್ ನ ಮಾಳಿಣ್ ಗ್ರಾಮದಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿದಿದ್ದು, ಮಣ್ಣಿನೊಂದಿಗೆ ಬಂಡೆಕಲ್ಲುಗಳು ಕೂಡ ಉರುಳಿವೆ ಎಂದು ಪೊಲೀಸ್ ಅಧಿಕಾರಿ ವಿನೋದ್ ಪವಾರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಈ ಕಾರಣದಿಂದಾಗಿ ಗುಡ್ಡದ ಮಣ್ಣು ಸಡಿಲಗೊಂಡು ಹಳ್ಳಿಯ ಮೇಲೆ ಕುಸಿದಿದೆ.
150ಕ್ಕೂ ಜನರು ತಮ್ಮ ತಮ್ಮ ಮನೆಗಳಲ್ಲಿ ನಿದ್ರಿಸುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ.
ಕೆಸರು, ಬಂಡೆಕಲ್ಲು ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಸೈನ್ಯದ ನೆರವನ್ನು ಯಾಚಿಸಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಶಾಸಕ ದಿಲೀಪ್ ವಾಲ್ಸ್ ಪಾಟೀಲ್ ತಿಳಿಸಿದ್ದಾರೆ.
ಮಧ್ಯಾಹ್ನದವರೆಗೆ ಇಬ್ಬರನ್ನು ರಕ್ಷಿಸಲಾಗಿದ್ದು ಸಂರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕಾಗಿ ಜಡಿ ಮಳೆ ಅಡ್ಡಿಯಾಗುತ್ತಿದೆ ಎಂದು ತಿಳಿದು ಬಂದಿದೆ.