ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಅವರು ವಿಬ್ಗಯೊರ್ ಶಾಲೆಗೆ ಮಂಗಳವಾರ ಭೇಟಿ ನೀಡಿ ಪೋಷಕರು ಮತ್ತು ಸಿಬ್ಬಂದಿಯೊಂದಿಗೆ ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.
ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣ ಸಂಬಂಧ ರೆಡ್ಡಿ ಅವರು ಪೋಷಕರು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು.ಶಾಲೆಯನ್ನು ಬೇಗನೆ ಪುನರಾರಂಭ ಮಾಡಿಸಬೇಕು. ಮಕ್ಕಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಬೇಕು. ಅತ್ಯಾಚಾರ ಪ್ರಕರಣ ಸಂಬಂಧ ಆಡಳಿತ ಮಂಡಳಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಬೇಕೆಂದು ಪೋಷಕರು, ರೆಡ್ಡಿ ಅವರಿಗೆ ಮನವಿ ಮಾಡಿದರು.
ಪೋಷಕರ ಮನವಿಗೆ ಸ್ಪಂದಿಸಿದ ಕಮಿಷನರ್, ‘ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಸಿಬ್ಬಂದಿ ವಿಳಂಬ ಮಾಡದೆ ಸಾಧ್ಯವಾದಷ್ಟು ಬೇಗನೆ ಪ್ರಕರಣದ ತನಿಖೆ ಪೂರ್ಣಗೊಳಿಸಿ ವರದಿ ನೀಡಲಿದ್ದಾರೆ. ಆರೋಪಿಗೆ ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ. ಆ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದರು.
‘ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲು ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚಿಸಲಾಗಿದೆ’ ಎಂದು ಭರವಸೆ ನೀಡಿದರು. ಬಳಿಕ ಅವರು ವಿಧಾನಸೌಧಕ್ಕೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ಮಾಹಿತಿ ನೀಡಿದರು.
ವೈಟ್ಫೀಲ್ಡ್ ಶಾಲೆ ಮೇಲೂ ದೂರು ದಾಖಲಿಸಿ: ಆರೋಪಿ ಮುಸ್ತಫಾನ ದುಷ್ಕೃತ್ಯದ ಬಗ್ಗೆ ಪೊಲೀಸರಿಗೆ ಈ ಹಿಂದೆ ಮಾಹಿತಿ ನೀಡದ ವೈಟ್ಫೀಲ್ಡ್ನ ಶಾಲೆಯ ವಿರುದ್ಧವೂ ಶಿಸ್ತು ಕ್ರಮ ಜರುಗಿಸುವಂತೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಒತ್ತಾಯಿಸಿದ್ದಾರೆ.
ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಮುಸ್ತಫಾನನ್ನು ವೈಟ್ಫೀಲ್ಡ್ನ ಶಾಲಾ ಆಡಳಿತ ಮಂಡಳಿ ಸದಸ್ಯರು ಸೇವೆಯಿಂದ ವಜಾಗೊಳಿಸಿದ್ದರು. ಆದರೆ, ಅವರು ಪೊಲೀಸರಿಗೆ ದೂರು ನೀಡದೆ ಮುಸ್ತಫಾನ ಅಪರಾಧ ಕೃತ್ಯಕ್ಕೆ ಪರೋಕ್ಷವಾಗಿ ಕುಮ್ಮಕ್ಕು ನೀಡಿದಂತಾಗಿದೆ. ಆದ್ದರಿಂದ ಅವರ ವಿರುದ್ಧವೂ ದೂರು ದಾಖಲಿಸಬೇಕು ಎಂದು ತಿಳಿಸಿದ್ದಾರೆ.
ಮಾನ್ಯತೆ ರದ್ದು ಪತ್ರ: ಪುನರ್ ಪರಿಶೀಲನೆಗೆ ಸರ್ಕಾರ ನಿರ್ಧಾರ
ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಆದಷ್ಟು ಬೇಗ ತರಗತಿಗಳು ಆರಂಭವಾಗುವಂತೆ ಮಾಡುವುದಕ್ಕಾಗಿ ವಿಬ್ಗಯೊರ್ ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಬೇಕೆಂದು ಭಾರತೀಯ ಪ್ರೌಢ ಶಿಕ್ಷಣ ಮಂಡಳಿಗೆ (ಐಸಿಎಸ್ಇ) ಮಾಡಿರುವ ಶಿಫಾರಸನ್ನು ಪುನರ್ ಪರಿಶೀಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಸಂಬಂಧ, ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸುವಂತೆ ಸರ್ಕಾರವು ಜುಲೈ 21ರಂದು ಐಸಿಎಸ್ಇಗೆ ಶಿಫಾರಸು ಮಾಡಿತ್ತು.ಶಾಲೆಗೆ ನೀಡಿರುವ ಮಾನ್ಯತೆಯನ್ನು ರದ್ದುಪಡಿಸದಂತೆ ಪೋಷಕರಿಂದ ಮನವಿಗಳು ಬಂದಿರುವುದರಿಂದ ನಿರ್ಧಾರ ಮರು ಪರಿಶೀಲಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ತಿಳಿಸಿರುವುದಾಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜ್ಕುಮಾರ್ ಖತ್ರಿ ಹೇಳಿದ್ದಾರೆ.
ಈ ನಡುವೆ, ಕಿಮ್ಮನೆ ರತ್ನಾಕರ ಅವರು ವಿಬ್ಗಯೊರ್ ಶಾಲೆಯ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿ, ಪೋಷಕರು ಎತ್ತಿರುವ ವಿಚಾರಗಳನ್ನು ಚರ್ಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.