ಕೋಲ್ಕತ್ತ (ಪಿಟಿಐ): ಕುಲಪತಿ ರಾಜೀನಾಮೆಗೆ ಆಗ್ರಹಿಸಿ ಜಾಧವಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಯನ್ನು ಫೇಸ್ಬುಕ್ನಲ್ಲಿ ಪ್ರಶ್ನಿಸಿದ ತೃಣಮೂಲ ಕಾಂಗ್ರೆಸ್ ಸಂಸದ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ವಿವಾದಕ್ಕೀಡಾಗಿದ್ದಾರೆ.
‘ಕಾಲೇಜಿನೊಳಗೆ ಮದ್ಯ ಹಾಗೂ ಮಾದಕವಸ್ತುಗಳಿಗೆ ನಿಷೇಧ ಹೇರಿದ್ದರಿಂದ ಜಾಧವಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆಯೇ?’ ಎಂದು ಅಭಿಷೇಕ್ ಬ್ಯಾನರ್ಜಿ ಅವರು ಫೇಸ್ಬುಕ್ನಲ್ಲಿ ಪ್ರಶ್ನಿಸಿದ್ದರು.
ಸೆಪ್ಟೆಂಬರ್ 17ರಂದು ವಿದ್ಯಾರ್ಥಿಗಳ ಮೇಲೆ ಪೊಲೀಸರ ಹಲ್ಲೆ ವಿರೋಧಿಸಿ, ಕುಲಪತಿ
, ಕುಲಪತಿ ಪರವಾಗಿರುವವರು ಹಾಗೂ ರಿಜಿಸ್ಟ್ರಾರ್ ರಾಜೀನಾಮೆಗೆ ಆಗ್ರಹಿಸಿ ಜಾಧವಪುರ ವಿಶ್ವವಿದ್ಯಾಲಯದ ಸಾವಿರಾರು ವಿದ್ಯಾರ್ಥಿಗಳು ಕೋಲ್ಕತ್ತದ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ತರಗತಿಗಳನ್ನು ಬಹಿಷ್ಕರಿಸುತ್ತಿದ್ದು, ಸಮೂಹ ಸಂವಹನದ ವಿದ್ಯಾರ್ಥಿಗಳು ಸೆಪ್ಟೆಂಬರ್ 18ರಂದು ಪರೀಕ್ಷೆ ಬಹಿಷ್ಕರಿಸಿದ್ದರು. ಅಭಿಷೇಕ್ ಹೇಳಿಕೆಗೆ ವಿಚಾರವಾದಿಗಳಿಂದ ಹಾಗೂ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾದ್ದರಿಂದ ಬಳಿಕ ಅವರು ಸಮಜಾಯಿಷಿ ನೀಡಿದ್ದಾರೆ. ‘ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ ಆದರೆ ಶೈಕ್ಷಣಿಕ ಕೇಂದ್ರಗಳಲ್ಲಿ ಗೂಂಡಾಗಿರಿಯನ್ನು ವಿರೋಧಿಸುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
ಸ್ವತಂತ್ರ ತನಿಖಾ ಆಯೋಗ
ಜಾಧವಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗಾಗಿ ಪಶ್ಚಿಮ ಬಂಗಾಳ ಸರ್ಕಾರ ಸ್ವತಂತ್ರ ಐವರು ಸದಸ್ಯರ ತನಿಖಾ ಮಂಡಳಿಯನ್ನು ಸೋಮವಾರ ರಚಿಸಿದೆ.
ಕಿರುಕುಳಕ್ಕೊಳಗಾದ ವಿದ್ಯಾರ್ಥಿನಿ ಯನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರು, ‘ಕೋಲ್ಕತ್ತ ವಿಶ್ವವಿದ್ಯಾಲಯದ ಕುಲಪತಿ ಸುರಂಜನ್ ದಾಸ್ ತನಿಖಾ ಮಂಡಳಿ ಮುಖ್ಯಸ್ಥರಾಗಿದ್ದು, 4 ದಿನದೊಳಗೆ ವರದಿ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು.
ಈ ಮಧ್ಯೆ ಯುವತಿ ತಂದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ತನಿಖಾ ಮಂಡಳಿಯಲ್ಲಿ ವಿಶ್ವಾಸವಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.
‘ನ್ಯಾಯ ದೊರಕಿಸಿಕೊಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಈ ತನಿಖಾ ಮಂಡಳಿಯಲ್ಲಿ ನನಗೆ ನಂಬಿಕೆ ಇದೆ. ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ವಿಶ್ವವಿದ್ಯಾಲಯದ ಕೆಲಸ ಯಥಾಸ್ಥಿತಿಯಲ್ಲಿ ಮುಂದುವರಿಸಲು ನೆರವಾಗಬೇಕು’ ಎಂದು ಅವರು ಹೇಳಿದ್ದಾರೆ.
ಹಿನ್ನೆಲೆ: ಆಗಸ್ಟ್ ತಿಂಗಳಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ವಿದ್ಯಾರ್ಥಿ ನಿಲಯಕ್ಕೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಪ್ರಕರಣದ ವಿಚಾರಣೆಗೆ ಸ್ವತಂತ್ರ ತನಿಖಾ ಮಂಡಳಿ ರಚಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿ.ವಿ ಕುಲಪತಿ ಅಭಿಜಿತ್ ಚಕ್ರವರ್ತಿ ಪೊಲೀಸರನ್ನು ಕರೆಸಿದ್ದರಿಂದ ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.