ಮಡಿಕೇರಿ: ಜಿಲ್ಲಾಡಳಿತದ ವತಿಯಿಂದ ಇನ್ನು ಮುಂದೆ ಪ್ರತಿ ತಿಂಗಳು ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತದ ಮಾದರಿಯಲ್ಲಿಯೇ ಇತರ ಇಲಾಖೆಗಳ ಪ್ರಮುಖ ಅಧಿಕಾರಿಗಳು ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಬೇಕು. ಜನಸಂಪರ್ಕ ಸಭೆ ನಡೆಸುವುದು ಕಡ್ಡಾಯವಾಗಿದೆ ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹೆಚ್ಚಿನ ಅರ್ಜಿಗಳು ಬಂದಿವೆ. ಇದರಿಂದ ಇತರ ಇಲಾಖೆಗಳಲ್ಲಿ ಸಮಸ್ಯೆ ಇಲ್ಲ ಎಂದು ಭಾವಿಸಬೇಕಿಲ್ಲ. ಎಲ್ಲಾ ಇಲಾಖೆಗಳಲ್ಲಿಯೂ ಅರ್ಜಿ ವಿಲೇವಾರಿ ಸೇರಿದಂತೆ ನಾನಾ ಸಮಸ್ಯೆಗಳಿದ್ದು, ಜನಸಂಪರ್ಕ ಸಭೆಯಲ್ಲಿ ಪರಿಹಾರ ಕಾಣಬೇಕಿದೆ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ವಿವಿಧ ಇಲಾಖೆಗಳಲ್ಲಿರುವ ಯೋಜನೆಗಳ ಬಗ್ಗೆ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ಮಾನವೀಯತೆ ಅಗತ್ಯ: ಕೆಲವು ಸಮಸ್ಯೆಗಳನ್ನು ಕಾನೂನು ಚೌಕಟ್ಟಿನಲ್ಲಿ ನೋಡಿದರೆ, ಇನ್ನು ಕೆಲವು ಸಮಸ್ಯೆಗಳನ್ನು ಮಾನವೀಯ ನೆಲೆಯಲ್ಲಿ ಕಂಡು ಪರಿಹರಿಸಬೇಕು ಎಂದು ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಅರ್ಜಿಗಳನ್ನು ಒಂದು ವಾರದೊಳಗೆ ಪರಿಶೀಲಿಸಿ ಪ್ರಥಮ ಆದ್ಯತೆಯಲ್ಲಿ ಬಗೆಹರಿಸಬೇಕು. ಇಲಾಖಾ ವ್ಯಾಪ್ತಿಯಲ್ಲಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.
ಬಾಣೆ ಭೂಮಿಗೆ ಕಂದಾಯ ನಿಗದಿಪಡಿಸುವಂತಾಗಬೇಕು ಎಂಬ ಮನವಿಗೆ ಪ್ರತಿಕ್ರಿಯಿಸಿದ ಸತೀಶ್ ಕುಮಾರ್, ಬಾಣೆ ಭೂಮಿಗೆ ಕಂದಾಯ ನಿಗದಿಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಹಾಜರಿದ್ದರು.