ಬೆಂಗಳೂರು: ಶಿಕ್ಷಣ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ಜಾಲಹಳ್ಳಿಯ ಆರ್ಕಿಡ್ ದಿ ಇಂಟರ್ನ್ಯಾಷನಲ್ ಶಾಲೆ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆಯು ಶುಕ್ರವಾರ ಜಾಲಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಸಂಬಂಧ ಪೊಲೀಸರು ಶಾಲೆಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ಕೆ ರೆಡ್ಡಿ ಅವರನ್ನು ಬಂಧಿಸಿದ್ದಾರೆ.
‘ಶಾಲಾ ಆಡಳಿತ ಮಂಡಳಿಯು ಒಂದರಿಂದ ಐದನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಬೋಧನೆ ಮಾಡುವುದಾಗಿ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದುಕೊಂಡಿತ್ತು. ಆದರೆ, ಇಲ್ಲಿ ಪ್ರಿ ನರ್ಸರಿಯಿಂದ ಏಳನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿದೆ. ಅಲ್ಲದೇ, ಅನುಮತಿ ಇಲ್ಲದೆ ಸಿಬಿಎಸ್ಸಿ ಪಠ್ಯಕ್ರಮ ಬೋಧಿಸಲಾಗುತ್ತಿದೆ. ಈ ರೀತಿ ನಿಯಮ ಉಲ್ಲಂಘನೆ ಮಾಡಿರುವ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಡಿಡಿಪಿಐ) ಎಚ್.ಬಿ.ಮಂಜುನಾಥ್ ದೂರು ಕೊಟ್ಟಿದ್ದಾರೆ.
‘ಶಾಲೆಯ ಮುಖ್ಯಸ್ಥರಾದ ಕೆ.ದುರ್ಗಾ, ಉಪಾಧ್ಯಕ್ಷರಾದ ವೈ.ಶಿಲ್ಪಾ, ಕಾರ್ಯದರ್ಶಿ ಕೆ.ಆರ್.ಕೆ ರೆಡ್ಡಿ ಹಾಗೂ ಜಂಟಿ ಕಾರ್ಯದರ್ಶಿ ಯು.ಸುರೇಂದ್ರ ಬಾಬು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಈಗಾಗಲೇ ರೆಡ್ಡಿ ಅವರನ್ನು ಬಂಧಿಸಲಾಗಿದ್ದು, ಶೀಘ್ರವೇ ಠಾಣೆಗೆ ಹಾಜರಾಗುವಂತೆ ಉಳಿದ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ’ ಎಂದು ಉತ್ತರ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ತಿಳಿಸಿದರು.
‘ಕಾನೂನು ಬಾಹಿರವಾಗಿ ಶಾಲೆ ನಡೆಸುವ ಮೂಲಕ ಆಡಳಿತ ಮಂಡಳಿಯಿಂದ 952 ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ವಂಚನೆಯಾಗಿದೆ’ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ. ಹೀಗಾಗಿ ಆಡಳಿತ ಮಂಡಳಿ ವಿರುದ್ಧ ವಂಚನೆ (ಐಪಿಸಿ 420), ನಕಲಿ ದಾಖಲೆ ಸೃಷ್ಟಿ (ಐಪಿಸಿ 418) ಹಾಗೂ 2009ರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
‘ಎಲ್ಕೆಜಿ, ಯುಕೆಜಿ ಪ್ರಾರಂಭಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ (ಬಿಇಒ) ಅನುಮತಿ ಪಡೆಯುವುದು ಕಡ್ಡಾಯ. ಆದರೆ, ಈ ಶಾಲೆಯು ಅಂಥ ಯಾವುದೇ ನಿಯಮಗಳನ್ನು ಪಾಲಿಸದೆ ಪ್ರಿ ನರ್ಸರಿ ಆರಂಭಿಸಿದೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಆರೋಪ ಮಾಡಿದ್ದರು.ಹೀಗಾಗಿ ಕೆ.ಆರ್.ಕೆ ರೆಡ್ಡಿ ಅವರಿಂದ ದಾಖಲೆಗಳನ್ನು ತರಿಸಿಕೊಂಡು ಪರಿಶೀಲಿಸಲಾಯಿತು. ಆಗ ಶಾಲೆಯಿಂದ ಶಿಕ್ಷಣ ಕಾಯ್ದೆ ಉಲ್ಲಂಘನೆಯಾಗಿರುವುದು ಗೊತ್ತಾಯಿತು. ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ದಾಖಲೆಗಳನ್ನು ಸಹ ಆಡಳಿತ ಮಂಡಳಿ ನಿರ್ವಹಣೆ ಮಾಡಿಲ್ಲ. ಹೀಗಾಗಿ ಮಧ್ಯಾಹ್ನ ಮೂರು ಗಂಟೆಗೆ ರೆಡ್ಡಿ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.
ಈ ಶಾಲೆಯಲ್ಲಿ ಓದುತ್ತಿರುವ ಮೂರು ವರ್ಷದ ವಿದ್ಯಾರ್ಥಿನಿ ಮೇಲೆ ಅ.21ರಂದು ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಮಗುವಿನ ಪೋಷಕರು ಜಾಲಹಳ್ಳಿ ಠಾಣೆಗೆ ದೂರು ಕೊಟ್ಟಿದ್ದರು. ಹೀಗಾಗಿ ಗುರುವಾರ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೋಹ್ಸಿನ್, ಶಾಲೆಯು ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಎಂದು ಡಿಡಿಪಿಐ ಅವರಿಗೆ ಸೂಚಿಸಿದ್ದರು.
ತನಿಖೆ ಚುರುಕು: ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ಕುಮಾರ್ ಅವರು ಶುಕ್ರವಾರ ಸುಮಾರು ಮೂರು ತಾಸುಗಳ ಕಾಲ ಶಾಲಾ ವಾಹನ ಚಾಲಕರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡರು.ನಂತರ ಸುದ್ದಿಗಾರರ ಜತೆ ಮಾತನಾಡಿದ ಅಲೋಕ್ಕುಮಾರ್, ‘ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ಮಾಡಬೇಕಾಗುತ್ತದೆ. ಮತ್ತೆ ಮತ್ತೆ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ಸುಳಿವು ಹುಡುಕಲು ಪ್ರಯತ್ನಿಸಲಾಗುತ್ತಿದೆ. ಆದರೆ, ಪ್ರಕರಣ ಸಂಬಂಧ ಈವರೆಗೂ ಯಾರನ್ನೂ ಬಂಧಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಎಸಿಪಿಗಳಾದ ಸಾ.ರಾ.ಫಾತಿಮಾ ಮತ್ತು ಶೋಭಾ ರಾಣಿ ಅವರು ಶೋಷಿತ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಗು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ. ಮಕ್ಕಳ ಸಹಾಯವಾಣಿ ಸಿಬ್ಬಂದಿ ಅಥವಾ ಮನೋವೈದ್ಯರ ಮೂಲಕ ಮಗುವಿಗೆ ಆಪ್ತ ಸಮಾಲೋಚನೆ ಮಾಡಿಸಲಾಗುವುದು’ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.ಇಂದು ಸಭೆ: ನಗರ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಅವರು ಶನಿವಾರ ಆಡಳಿತ ಮಂಡಳಿ ಹಾಗೂ ಪೋಷಕರ ಸಭೆ ಕರೆದಿದ್ದಾರೆ. ತರಗತಿಗಳನ್ನು ಪುನರಾರಂಭಿಸುವ ಬಗ್ಗೆ ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.