ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಂದ ಬಲವಂತವಾಗಿ ಚಂದಾ ವಸೂಲಿ ಮಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ನಗರ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಅಥವಾ ಇತರೆ ಕಾರ್ಯಕ್ರಮಗಳ ಆಯೋಜನೆಗೆ ಬಲವಂತವಾಗಿ ವಂತಿಗೆ ಸಂಗ್ರಹಿಸುವಂತಿಲ್ಲ. ವಂತಿಗೆ ನೀಡುವಂತೆ ಒತ್ತಾಯಿಸುವವರ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬಹುದು ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸ್ಥಳೀಯ ಪೊಲೀಸರಿಂದ ಅನುಮತಿ ಪಡೆಯಬೇಕು. ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಮೆರವಣಿಗೆಗೆ ಸೂಚನೆಗಳು
ಗಣೇಶ ಮೂರ್ತಿ ಪ್ರತಿಷ್ಠಾಪನಾ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯ ವಿವರವನ್ನು ಸ್ಥಳೀಯ ಪೊಲೀಸರಿಗೆ ನೀಡಬೇಕು.
ಪೆಂಡಾಲ್, ಬ್ಯಾರಿಕೇಡ್ ಮತ್ತು ಶಾಮಿಯಾನಗಳನ್ನು ವ್ಯವಸ್ಥಿತವಾಗಿ ಹಾಕಬೇಕು. ಅದಕ್ಕೆ ಬಿಬಿಎಂಪಿಯಿಂದ ಅಥವಾ ಜಾಗದ ಮಾಲೀಕರಿಂದ ಅನುಮತಿ ಪಡೆಯಬೇಕು. ವಿವಾದಿತ ಸ್ಥಳಗಳು, ಹೆಚ್ಚು ವಾಹನ ಸಂಚಾರವಿರುವ ರಸ್ತೆಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ.
ಮೂರ್ತಿ ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಮರ್ಪಕ ಬೆಳಕಿನ ವ್ಯವಸ್ಥೆ ಇರುವಂತೆ ಕ್ರಮ ಕೈಗೊಳ್ಳಬೇಕು. ಸಿ.ಸಿ ಕ್ಯಾಮೆರಾ ಮತ್ತು ಅಗ್ನಿನಂದಕ ಸಲಕರಣೆಗಳನ್ನು ಅಳವಡಿಸಬೇಕು.
ಆ ಸ್ಥಳದಲ್ಲಿ ದಹನಶೀಲ ವಸ್ತುಗಳನ್ನು ಇಡಬಾರದು ಮತ್ತು ಅಡುಗೆ ಮಾಡಬಾರದು. ವಿದ್ಯುತ್ ದೀಪಾಲಂಕಾರಕ್ಕೆ ಬೆಸ್ಕಾಂ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು.
ಭಕ್ತರ ಆಗಮನ, ನಿರ್ಗಮನಕ್ಕೆ ಸೂಕ್ತ ಪ್ರವೇಶದ್ವಾರಗಳ ವ್ಯವಸ್ಥೆ ಮಾಡಬೇಕು. ಸ್ವಯಂ ಸೇವಕರನ್ನು ನಿಯೋಜಿಸಿ ಜನಜಂಗುಳಿ ನಿಯಂತ್ರಿಸಬೇಕು.
ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯ ಬಗ್ಗೆ ಸ್ಥಳೀಯ ಠಾಣೆಗೆ ಮಾಹಿತಿ ನೀಡಿ, ಪೊಲೀಸ್ ಭದ್ರತೆ ಪಡೆದುಕೊಳ್ಳಬೇಕು. ಹಿರಿಯ ನಾಗರಿಕರು, ಶಾಲಾ ಮಕ್ಕಳು ಮತ್ತು ಸ್ಥಳೀಯರಿಗೆ ತೊಂದರೆಯಾಗದಂತೆ ಬೆಳಿಗ್ಗೆ ಆರು ಗಂಟೆಯಿಂದ ರಾತ್ರಿ ಹತ್ತರವರೆಗೆ ಮಾತ್ರ ಧ್ವನಿವರ್ಧಕಗಳನ್ನು ಬಳಸಬೇಕು.
ಗಣೇಶ ಮೂರ್ತಿಗಳ ಮೆರವಣಿಗೆ, ವಿಸರ್ಜನೆ, ಮನರಂಜನಾ ಕಾರ್ಯಕ್ರಮಗಳ ವೇಳೆ ಹೆಣ್ಣು ಮಕ್ಕಳನ್ನು ಚುಡಾಯಿಸದಂತೆ ಮತ್ತು ಯಾವುದೇ ಅಪರಾಧ ಚಟುವಟಿಕೆಗಳು ನಡೆಯದಂತೆ ಆಯೋಜಕರು ಎಚ್ಚರ ವಹಿಸಬೇಕು. ಸ್ವಯಂ ಸೇವಕರನ್ನು ಗುರುತಿಸಲು ಅನುಕೂಲವಾಗುವಂತೆ ಅವರಿಗೆ ಗುರುತಿನ ಚೀಟಿ, ಬ್ಯಾಡ್ಜ್, ಸಮವಸ್ತ್ರ ನೀಡಬೇಕು.
ಮೆರವಣಿಗೆಯು ರಾತ್ರಿ 10 ಗಂಟೆಯೊಳಗೆ ಮುಗಿಯಬೇಕು. ಮೆರವಣಿಗೆ ಸಾಗುವ ಮಾರ್ಗದಲ್ಲಿನ ವಿದ್ಯುತ್ ತಂತಿಗಳು, ಮರದ ಕೊಂಬೆಗಳ ಬಗ್ಗೆ ಗಮನಹರಿಸಿ ಯಾವುದೇ ಅವಘಡ ನಡೆಯದಂತೆ ನೋಡಿಕೊಳ್ಳಬೇಕು. ಸೂಕ್ಷ್ಮ, ಅತಿ ಸೂಕ್ಷ್ಮ ಮತ್ತು ಪ್ರಾರ್ಥನಾ ಸ್ಥಳಗಳ ಬಳಿ ಮೆರವಣಿಗೆ ಸಾಗುವಾಗ ಪಟಾಕಿ ಸಿಡಿಸಬಾರದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.