ನವದೆಹಲಿ: ‘ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಜಿ. ಜನಾರ್ದನರೆಡ್ಡಿ ಅವರ ಮೇಲೆ ಕ್ರಮ ಕೈಗೊಳ್ಳದಂತೆ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ತಮ್ಮ ಮೇಲೆ ತೀವ್ರ ಒತ್ತಡ ಹೇರಿದ್ದರು’ ಎಂದು ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಹೇಳಿದರು.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಮತ್ತು ಜನಾರ್ದನ ರೆಡ್ಡಿ ಅವರ ವಿರುದ್ಧ ಕ್ರಮಕೈಗೊಳ್ಳಲು ತಾವು ಮುಂದಾದಾಗ, ಆಗಿನ ಯುಪಿಎ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಹೊಂದಿದ್ದ ದಕ್ಷಿಣ ಭಾರತ ಮೂಲದ ಪ್ರಭಾವಿ ರಾಜಕಾರಣಿಯೊಬ್ಬರು ಕ್ರಮ ಕೈಗೊಳ್ಳಬಾರದೆಂದು ಒತ್ತಡ ಹಾಕಿದ್ದರು ಎಂಬ ಸಂಗತಿಯನ್ನು ಭಾರದ್ವಾಜ್ ಬಹಿರಂಗಪಡಿಸಿದರು.
‘ಬಿಜೆಪಿ ಸರ್ಕಾರವನ್ನು ವಜಾ ಮಾಡುವಂತೆ 4 ಸಲ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೆ. ಆ ವರದಿ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅದರ ಹಿಂದೆಯೂ ಅದೇ ರಾಜಕಾರಣಿಯ ಕೈವಾಡವಿತ್ತು’ ಎಂದೂ ಮಾಜಿ ರಾಜ್ಯಪಾಲ ಆರೋಪಿಸಿದರು.