ಬೆಂಗಳೂರು: ರಾಜ್ಯ ಬಿಜೆಪಿ ಮಹಿಳಾ ಘಟಕದಿಂದ ವಿವಿಧ ಜಿಲ್ಲೆಗಳ 135 ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗಿದೆ. 224 ಕ್ಷೇತ್ರಗಳಲ್ಲಿಯೂ ಈ ಕಾರ್ಯ ಆರಂಭಗೊಂಡಿದೆ ಎಂದು ಘಟಕದ ಅಧ್ಯಕ್ಷೆ, ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು.
ಬುಧವಾರ ಬಿಜೆಪಿ ಮಹಿಳಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಸಭೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ವಿ. ಸೋಮಣ್ಣ, ‘ರಾಜ್ಯ ಸರ್ಕಾರ ನಿಷ್ಕ್ರಿಯಗೊಂಡಿದೆ. ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡದೇ ಸರ್ಕಾರ ನಡೆಸುತ್ತಿದ್ದಾರೆ. ಜನರ ಭಾವನೆಗಳಿಗೆ ಬೆಲೆ ಕೊಡುತ್ತಿಲ್ಲ. ಯಾವ ಕಾನೂನನ್ನು ಹೇಗೆ ಬಳಸಬೇಕು ಎಂಬ ಸಾಮಾನ್ಯ ಜ್ಞಾನವೇ ಇಲ್ಲ. ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಣ್ಣುಮಕ್ಕಳ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದಿದ್ದರೆ, ತಮ್ಮ ಮನೆಗೆ ಮಹಿಳೆಯರು ಮುತ್ತಿಗೆ ಹಾಕಲು ಯತ್ನಿಸಿದಾಗ ಸೌಜನ್ಯದಿಂದ ನಡೆದುಕೊಳ್ಳುತ್ತಿದ್ದರು’ ಎಂದರು. ಮೇಯರ್ ಶಾಂತಕುಮಾರಿ, ರಾಷ್ಟ್ರೀಯ ಕಾರ್ಯದರ್ಶಿ ಜ್ಯೋತಿ ಪುತ್ತೂರಾಯ ಮತ್ತಿತರರು ಉಪಸ್ಥಿತರಿದ್ದರು.
ಕೊರಳಪಟ್ಟಿ ಹಿಡಿಯುವ ಕಾಲ
ಬಿಜೆಪಿ ಸರ್ಕಾರ ಆರಂಭಿಸಿದ ಜನಪರ ಕಾರ್ಯಕ್ರಮಗಳನ್ನು ಕಡೆಗಣಿಸಿದ ಮುಖ್ಯಮಂತ್ರಿಗಳ ಕೊರಳಪಟ್ಟಿ ಹಿಡಿಯುವ ಕಾಲ ಬರಲಿದೆ.
-ವಿ. ಸೋಮಣ್ಣ