ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೌನ್ಸಿಲ್ ಸಭೆ ನಡೆದ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಸರಣಿ ಪ್ರತಿಭಟನೆಗಳು ನಡೆದವು.
‘ಕಳೆದ 23 ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಗುತ್ತಿಗೆ ಮೊತ್ತವನ್ನು ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘ ಸದಸ್ಯರು ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್, ಕಾರ್ಯದರ್ಶಿ ಟಿ. ವೆಂಕಟೇಶ್ ನೇತೃತ್ವ ವಹಿಸಿದ್ದರು.
ಗುತ್ತಿಗೆದಾರರ ಅಹವಾಲು ಸ್ವೀಕರಿಸಿ ಮಾತನಾಡಿದ ಆಯುಕ್ತ ಎಂ.ಲಕ್ಷ್ಮೀನಾರಾಯಣ, ‘ಬಜೆಟ್ ಗಾತ್ರಕ್ಕೆ ತಕ್ಕಂತೆ ವರಮಾನ ಸಂಗ್ರಹ ಆಗದೇ ಇರುವುದರಿಂದ ಸಮಸ್ಯೆಯಾಗಿದೆ. ರಾಜ್ಯ ಸರ್ಕಾರ ಒಂದೆರಡು ದಿನಗಳಲ್ಲಿ ₨ 300 ಕೋಟಿ ಅನುದಾನ ಬಿಡುಗಡೆ ಮಾಡಲಿದ್ದು, ಆ ಮೊತ್ತವನ್ನು ಗುತ್ತಿಗೆದಾರರ ಬಾಕಿ ಪಾವತಿಗೆ ಬಳಸಲಾಗುವುದು’ ಎಂದು ಭರವಸೆ ನೀಡಿದರು.
ನಾಲ್ಕು ಸಾವಿರ ಪೌರ ಕಾರ್ಮಿಕರ ನೇಮಕಕ್ಕೆ ಆಗ್ರಹಿಸಿ ಬಿಬಿಎಂಪಿ ಸದಸ್ಯ ಟಿ.ಮಲ್ಲೇಶ್ ಅವರ ನೇತೃತ್ವದಲ್ಲಿ ಬಿಬಿಎಂಪಿ ಎಸ್ಸಿ, ಎಸ್ಟಿ ನೌಕರರ ಸಂಘದ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು. ‘ಸರ್ಕಾರದಿಂದ ಅನುಮತಿ ಸಿಕ್ಕೊಡನೆ ಭರ್ತಿ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ಆಯುಕ್ತರು ಭರವಸೆ ನೀಡಿದರು.
ಕಾಕ್ಸ್ಟೌನ್ನ ಸ್ಟೂಡೆಂಟ್ ಯೂನಿಯನ್ ಫುಟ್ಬಾಲ್ ಕ್ಲಬ್ನ ಆಟಗಾರರು ಫುಟ್ಬಾಲ್ ಆಡಲು ಬಿಬಿಎಂಪಿ ಮೈದಾನವನ್ನು ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.