ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅಧಿಕಾರ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಶನಿವಾರವೂ ಕಸರತ್ತು ಮುಂದುವರಿಸಿವೆ.
ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾತುಕತೆಯ ಬೆನ್ನಲ್ಲೇ ಬಿಜೆಪಿ ಮುಖಂಡರು ಜೆಡಿಎಸ್ ಸದಸ್ಯರ ಬೆಂಬಲ ಕೋರುವ ಪ್ರಯತ್ನ ನಡೆಸಿದ್ದಾರೆ.
ಜೆಡಿಎಸ್ ಸದಸ್ಯರೂ ಸೇರಿದಂತೆ ಪಕ್ಷೇತರರಾಗಿ ಆಯ್ಕೆಯಾಗಿರುವ ಸದಸ್ಯರ ಬೆಂಬಲ ಪಡೆಯಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
‘ಜನಾದೇಶ ಇರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಗಾಗಿಯೇ ಹೊರತು ಬಿಜೆಪಿಗಲ್ಲ. ಜನ ಬಿಜೆಪಿ ಪಕ್ಷವನ್ನು ತಿರಸ್ಕರಿಸಿದ್ದಾರೆ. ದೇವೇಗೌಡರು ಬದುಕಿರುವವರೆಗೂ ಬಿಜೆಪಿ ಜತೆ ಜೆಡಿಎಸ್ ಕೈಜೋಡಿಸುವ ಮಾತೇ ಇಲ್ಲ’ ಎಂದು ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.