ಕಾರವಾರ: ಬೈನಾ ಸಂತ್ರಸ್ತ ಕನ್ನಡಿಗರಿಗೆ ಗೋವಾ ಸರ್ಕಾರ ವಾಸ್ಕೊದ ಬುಡ್ಡೆಬಾಟ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ಕಲ್ಪಿಸಿರುವ ತಾತ್ಕಾಲಿಕ ಪುನರ್ವಸತಿ ಕೇಂದ್ರಕ್ಕೆ ಸೋಮವಾರ ಸಂಜೆ ಒಂಬತ್ತು ಕುಟುಂಬಗಳು ಸ್ಥಳಾಂತರಗೊಂಡವು.
ದಕ್ಷಿಣ ಗೋವಾ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಸಂತ್ರಸ್ತ ಕುಟುಂಬಗಳ ದಾಖಲೆಗಳನ್ನು ಪರಿಶೀಲಿಸಿ, ನಂತರ ತಾತ್ಕಾಲಿಕ ಕೇಂದ್ರಕ್ಕೆ ಸ್ಥಳಾಂತರಗೊಳ್ಳಲು ಅವಕಾಶ ಮಾಡಿಕೊಟ್ಟರು.
‘ಈ ಕೇಂದ್ರದಲ್ಲಿ ಸುಮಾರು 25 ಕುಟುಂಬಗಳಿಗೆ ಅವಕಾಶ ಕಲ್ಪಿಸಲಿದ್ದು, ಉಳಿದ ಕುಟುಂಬಗಳಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತರ ಪೈಕಿ ಕೆಲವರು ಈಗಾಗಲೇ ಬಾಡಿಗೆ ಮನೆಗಳಿಗೆ ತೆರಳಿದ್ದು, ಉಳಿದವರಿಗೆ ಪುನರ್ವಸತಿ ಸಿಗಬೇಕಿದೆ’ ಎಂದು ಅಖಿಲ ಗೋವಾ ಕನ್ನಡಿಗರ ಸಂಘದ ಅಧ್ಯಕ್ಷ ಸಿದ್ಧಣ್ಣ ಮೇಟಿ ‘ಪ್ರಜಾವಾಣಿ’ಗೆ ತಿಳಿಸಿದರು.