ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಬುಧವಾರ ಮುನ್ಸೂಚನೆ ನೀಡಿದೆ.
‘ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ತಾಪಮಾನ ತಗ್ಗಿದೆ. ಇದರಿಂದಾಗಿ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೂ ಮಾಹಿತಿ ನೀಡಲಾಗಿದೆ‘ ಎಂದು ಪ್ರಾದೇಶಿಕ ಕಚೇರಿಯ ನಿರ್ದೇಶಕ ಬಿ.ಪುಟ್ಟಣ್ಣ ಹೇಳಿದರು.
ಜೂನ್ 1ರಿಂದ ಆಗಸ್ಟ್ 27ರ ಅವಧಿಯಲ್ಲಿ ರಾಜ್ಯದಲ್ಲಿ 654.8 ಮಿ.ಮೀ. ಮಳೆಯಾಗಿದೆ. ಈ ಅವಧಿ-ಯಲ್ಲಿ ವಾಡಿಕೆಯಂತೆ 684 ಮಿ.ಮೀ. ಮಳೆಯಾಗಬೇಕಿತ್ತು. ಬೆಂಗಳೂರಿನಲ್ಲಿ 102.2 ಮಿ.ಮೀ. ಮಳೆ ದಾಖಲಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 141.6 ಮಿ.ಮೀ. ಮಳೆಯಾಗಬೇಕಿತ್ತು.