ಬೆಂಗಳೂರು: ಕೇಂದ್ರ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ರೈತ ವಿರೋಧಿ. ಅದನ್ನು ಹಿಂದಕ್ಕೆ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯನಾರಾಯಣ ಆಗ್ರಹಿಸಿದರು.
ಸಿಪಿಎಂ ವತಿಯಿಂದ ಕೆ.ಆರ್.ಪುರದಲ್ಲಿ ಸೋಮವಾರ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ಸುಗ್ರೀವಾಜ್ಞೆ ವಿರೋಧಿಸಿ ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಶ್ವತ ನೀರಾವರಿ ಯೋಜನೆಗಾಗಿ ಪರಮಶಿವಯ್ಯ ವರದಿಯನ್ನು ಜಾರಿಗೆ ತರಬೇಕು.
ಕೃಷ್ಣಾ ಕಾವೇರಿ ಕಣಿವೆಯ ಎಲ್ಲ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಗೀತಾ ಮಾತನಾಡಿ ಕೋಲಾರದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.