ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಿಗಿರಿ ಜಗಳದಿಂದ ಅಭಿವೃದ್ಧಿ ಕುಂಠಿತ

ಮಂತ್ರಿಗಿರಿ ಜಗಳದಿಂದ ಅಭಿವೃದ್ಧಿ ಕುಂಠಿತ
Last Updated 26 ಜೂನ್ 2016, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂತ್ರಿಗಿರಿಗಾಗಿ ಜಗಳ ನಡೆಯುತ್ತಿದೆ. ಅವರ ಒಳಜಗಳದಿಂದ ರಾಜ್ಯದ ಅಭಿವೃದ್ಧಿ ಕುಠಿತವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ  ಯಡಿಯೂರಪ್ಪ ಆರೋಪಿಸಿದರು. ಬಿಜೆಪಿ ಯಲಹಂಕ ವಿಧಾನಸಭಾ ಕ್ಷೇತ್ರದ ವತಿಯಿಂದ  ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾ ವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಲೋಕಾಯುಕ್ತರನ್ನು ನೇಮಕ ಮಾಡಲು ಮುಖ್ಯಮಂತ್ರಿಗೆ ಇದುವರೆಗೂ ಸಾಧ್ಯವಾಗಿಲ್ಲ. ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ 44 ಕಡತಗಳು ನಾಪತ್ತೆಯಾಗಿರುವುದು ಆಡಳಿತ  ವೈಫಲ್ಯಕ್ಕೆ ಉದಾಹರಣೆ. ಬೆಂಗಳೂರು ನಗರದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳನ್ನು ದುರಸ್ತಿಮಾಡಲೂ ಸಾಧ್ಯವಾಗದಂತಹ ದುಸ್ಥಿತಿ ಇದೆ. ಭ್ರಷ್ಟಾಚಾರ ಮಾತ್ರ ವ್ಯಾಪಕವಾಗಿದೆ’  ಎಂದು ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ  ವಾಗ್ದಾಳಿ ನಡೆಸಿದರು.

‘ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ಕೊಂಡು ಮುಂದಿನ ಚುನಾವಣೆ ಎದುರಿಸಬೇಕಾದ ಅಗತ್ಯವಿಲ್ಲ. ಬಿಜೆಪಿ ಆಡಳಿತಾವಧಿಯ ಜನಪರ ಕಾರ್ಯಕ್ರಮಗಳು ಹಾಗೂ ಕಳೆದ ಎರಡು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ’ ಎಂದರು.

‘ರಾಜ್ಯದ 224 ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶಗಳನ್ನು ಹಮ್ಮಿಕೊಳ್ಳಲಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ.  ಮಾದರಿ ರಾಜ್ಯ ನಿರ್ಮಾಣ ನಮ್ಮ ಗುರಿ’ ಎಂದರು.

ಶಾಸಕ ಎಸ್‌.ಆರ್‌.ವಿಶ್ವನಾಥ್‌ ಮಾತನಾಡಿ, ‘ಬಿಜೆಪಿ ಆಡಳಿತಾವಧಿಯಲ್ಲಿ ಅರ್ಕಾವತಿ ನದಿ ಪುನಶ್ಚೇತನಕ್ಕೆ ₹ 23 ಕೋಟಿ, ಯಲಹಂಕ ಕೆರೆ ಅಭಿವೃದ್ಧಿಗೆ ₹ 13 ಕೋಟಿ  ಅನುದಾನ ಮಂಜೂರಾಗಿತ್ತು. ಕ್ಷೇತ್ರದಲ್ಲಿ ಬಡವರಿಗೆ 9 ಸಾವಿರ ಮನೆಗಳನ್ನು ನಿರ್ಮಿಸಿಕೊಟ್ಟಿದ್ದೆವು.  ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಒಂದು ಮನೆಯನ್ನೂ ಕಟ್ಟಿಸಿಕೊಟ್ಟಿಲ್ಲ. ಕಾಂಗ್ರೆಸ್ ಆಡಲಿತದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ ಎಂದು ಅವರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT