ಬಳ್ಳಾರಿ: ಕರ್ತವ್ಯಲೋಪ ಹಾಗೂ ದುರ್ನಡತೆ ಆರೋಪದ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಮಂಟೆಸ್ವಾಮಿ ಅವರನ್ನು ಸೋಮವಾರ ಅಮಾನತು ಮಾಡಲಾಗಿದೆ.
ಜೂನ್ 7ರಂದು ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದಿದ್ದ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರೊಂದಿಗೆ ಮಾತಿನ ಚಕಮಕಿ ನಡೆಸಿದ್ದ ಮಂಟೆಸ್ವಾಮಿ, ‘ಸಭೆಗೆ ತಪ್ಪು ಮಾಹಿತಿ ನೀಡಬೇಡಿ’ ಎಂದು ಸಚಿವರಿಗೆ ಹೇಳಿದ್ದರಿಂದ ಅವರ ವಿರುದ್ಧ ಕ್ರಮಕ್ಕೆ ಸಚಿವರು ಶಿಫಾರಸು ಮಾಡಿದ್ದರು.
ತಾಲ್ಲೂಕಿನ ಕುರುಗೋಡು ಗ್ರಾಮದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಾಗ ಕೂಡಲೇ ಸ್ಥಳಕ್ಕೆ ಬಂದು, ಕ್ರಮ ಕೈಗೊಂಡಿಲ್ಲ ಎಂದು ಸಚಿವರು ಆರೋಪಿಸಿದಾಗ, ಮಂಟೆಸ್ವಾಮಿ ಅವರು ಸಚಿವರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರಲ್ಲದೆ, ‘ಮಾತನಾಡದೆ ಕುಳಿತುಕೊಳ್ಳಿ’ ಎಂದು ಆದೇಶಿಸಿದರೂ ಕುಳಿತುಕೊಳ್ಳದೆ ವಾದ ಮುಂದುವರಿಸಿದ್ದರು. ಆದ್ದರಿಂದ ಅವರನ್ನು ಅಮಾನತುಗೊಳಿಸಲಾಗಿದೆ.