ವಡೋದರಾ (ಪಿಟಿಐ): ಲೋಕಸಭಾ ಚುನಾವಣೆ ವೇಳೆ ಗುಜರಾತ್ನ ವಡೋದರಾ ಕ್ಷೇತ್ರದಲ್ಲಿನ ಎಲ್ಲಾ 1,591 ಮತಗಟ್ಟೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಚುನಾವಣಾ ಆಯೋಗ ಅಳವಡಿಸಲಿದೆ.
ದೇಶದಲ್ಲಿ ಇಂತಹ ಪ್ರಯೋಗ ನಡೆಯುತ್ತಿರುವುದು ಇದೇ ಮೊದಲು. ಸಿಸಿಟಿವಿ ಕ್ಯಾಮೆರಾದ ಕಣ್ಗಾವಲಿನ ಜೊತೆಗೆ ವಡೋದರಾದ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿರುವ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಚಿತ್ರೀಕರಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕೇಂದ್ರಕ್ಕೆ ‘ಸುಪ್ರೀಂ’ ನೋಟಿಸ್
ನವದೆಹಲಿ (ಐಎಎನ್ಎಸ್): ಸಿಬಿಐನ ಹೆಚ್ಚುವರಿ ನಿರ್ದೇಶಕಿಯಾಗಿ ಐಪಿಎಸ್ ಅಧಿಕಾರಿ ಅರ್ಚನಾ ರಾಮಸುಂದರಮ್ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಪತ್ರಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತ ವಿನೀತ್ ನರೇನ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಂ. ಲೋಧಾ, ಮದನ್ ಬಿ.ಲೋಕೂರ್ ಮತ್ತು ಕುರಿಯನ್ ಜೋಸೆಫ್ ಅವರನ್ನೊಳಗೊಂಡ ನ್ಯಾಯ-ಪೀಠ, ಕೇಂದ್ರ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತು.
ಕೇಂದ್ರ ಜಾಗೃತ ಆಯೋಗ ಕಾಯ್ದೆ ಮತ್ತು ದೆಹಲಿ ವಿಶೇಷ ಪೊಲೀಸ್ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಮನಸೋ ಇಚ್ಛೆ ಈ ನೇಮಕ ಮಾಡಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
‘ಜನರೇ ಕೋರ್ಟ್ ಮೆಟ್ಟಿಲೇರಬಹುದು’
ನವದೆಹಲಿ (ಪಿಟಿಐ): ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಸಲ್ಲಿಸುವ ಸುಳ್ಳು ಪ್ರಮಾಣಪತ್ರಗಳ ವಿರುದ್ಧ ಜನರೇ ನೇರವಾಗಿ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಚುನಾವಣಾ ಆಯೋಗ ಹೇಳಿದೆ.
ಪ್ರಮಾಣ ಪತ್ರಗಳಲ್ಲಿ ಸುಳ್ಳು ಮಾಹಿತಿಗಳನ್ನು ನೀಡಲಾಗುತ್ತಿದೆ ಎಂಬ ದೂರುಗಳು ಭಾರಿ ಸಂಖ್ಯೆಯಲ್ಲಿ ಬರುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ರೀತಿ ಹೇಳಿದೆ.