ನವದೆಹಲಿ (ಪಿಟಿಐ): ಮರಾಠಾ ಸಮುದಾಯದವರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ 16ರಷ್ಟು ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿರುವ ಬಾಂಬೆ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಹಾಗೂ ಇತರ ಹಲವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ನಿರಾಕರಿಸಿದ ಮುಖ್ಯ ನ್ಯಾಯಮೂರ್ತಿ ಎಚ್. ಎಲ್. ದತ್ತು ಅವರ ನೇತೃತ್ವದ ಪೀಠ, ‘ಬಾಂಬೆ ಹೈಕೋರ್ಟ್ ಈಗ ಮಧ್ಯಾಂತರ ಆದೇಶ ನೀಡಿದೆ. ಈ ಕುರಿತು ಅದು ಅಂತಿಮ ನಿರ್ಧಾರ ತೆಗೆದುಕೊಳ್ಳಲಿ. ಆಮೇಲೆ ನೋಡೋಣ’ ಎಂದು ಅಭಿಪ್ರಾಯಪಟ್ಟಿತು.