ಗದಗ: ಮಹಾದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ.
ನಗರದ ರೋಟರಿ ರಸ್ತೆ ಬಳಿಯಿರುವ ಸಂಸದ ಶಿವಕುಮಾರ ಉದಾಸಿ ಅವರ ಜನಸಂಪರ್ಕ ಕಚೇರಿ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು. ಕಚೇರಿಯ ನಾಮಫಲಕವನ್ನು ಕಿತ್ತುಹಾಕಿ, ಕಚೇರಿಯೊಳಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದರು.
ನಗರಸಭೆ ಹಾಗೂ ತಹಶೀಲ್ದಾರ್ ಕಚೇರಿ ಮುಚ್ಚುವಂತೆ ಪ್ರತಿಭಟನಾಕಾರರು ಕಚೇರಿಯೊಳಗೆ ನುಗ್ಗಿ ಒತ್ತಾಯಿಸಿದರು. ಮುಖ್ಯ ಅಂಚೆ ಕಚೇರಿ ಹಾಗೂ ಕೆನರಾ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.
ಮಹಾತ್ಮ ಗಾಂಧಿ ವೃತ್ತದ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.