ಮುಂಬೈ (ಪಿಟಿಐ): ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ನವೆಂಬರ್ 10ರಿಂದ ಮೂರು ದಿನ ಮಹಾರಾಷ್ಟ್ರ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಇದೇ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಾಸಮತ ಯಾಚಿಸಲಿದೆ.
ನ.10ರಂದು ಹಂಗಾಮಿ ಸ್ಪೀಕರ್ ಆಯ್ಕೆ ನಡೆಯಲಿದ್ದು, 12ರಂದು ಹೊಸದಾಗಿ ಆಯ್ಕೆಯಾದ ಶಾಸಕರು ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಇದಾದ ನಂತರ ಫಡ್ನವೀಸ್ ವಿಶ್ವಾಸಮತ ಕೋರಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಬಿಜೆಪಿ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸಲು ರಾಜ್ಯಪಾಲ ಸಿ. ವಿದ್ಯಾಸಾಗರ ರಾವ್ 15 ದಿನಗಳ ಗಡುವು ನೀಡಿದ್ದಾರೆ.
ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ 15 ದಿನಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.
288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಾಸಕರೊಬ್ಬರ ಸಾವಿನ ನಂತರ ಬಿಜೆಪಿ ಸದಸ್ಯರ ಸಂಖ್ಯೆ 121ಕ್ಕೆ ಕುಸಿದಿದೆ. ಏಳು ಪಕ್ಷೇತರರು ಹಾಗೂ ಪ್ರಾದೇಶಿಕ ಪಕ್ಷಗಳ ಆರು ಶಾಸಕರ ಬೆಂಬಲ ತನಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ.
41 ಶಾಸಕರನ್ನು ಹೊಂದಿರುವ ಎನ್ಸಿಪಿ ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿದೆ. ಆದರೆ, ಬೆಂಬಲ ಸ್ವೀಕರಿಸಿದ ಅಥವಾ ತಿರಸ್ಕರಿಸಿದ ಬಗ್ಗೆ ಬಿಜೆಪಿ ಇನ್ನೂ ತನ್ನ ನಿಲುವನ್ನು ಬಹಿರಂಗಪಡಿಸಿಲ್ಲ. ಸರ್ಕಾರ ವಿಶ್ವಾಸಮತ ಕೋರುವ ಸಂದರ್ಭದಲ್ಲಿ ಎನ್ಸಿಪಿ ಶಾಸಕರು ಗೈರು ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಶಿವಸೇನಾ ಜತೆ ಮಾತುಕತೆ ಸರಿಯಾದ ದಿಕ್ಕಿನಲ್ಲಿ ಸಾಗಿದೆ ಎಂದು ಮುಖ್ಯಮಂತ್ರಿ ಫಡ್ನವೀಸ್ ಹೇಳಿದ್ದು, ಸೇನಾ ಜತೆ ಸೇರಿ ಸದೃಢ ಸರ್ಕಾರ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ ಹತ್ತು ಸಚಿವರಿಗೆ ಫಡ್ನವೀಸ್ ಭಾನುವಾರ ಖಾತೆಗಳನ್ನು ಹಂಚಿದ್ದಾರೆ. ಪ್ರಮುಖವಾದ ಗೃಹ, ನಗರಾಭಿವೃದ್ಧಿ, ವಸತಿ ಹಾಗೂ ಆರೋಗ್ಯ ಖಾತೆಗಳನ್ನು ತಾವೇ ಇಟ್ಟುಕೊಂಡಿದ್ದಾರೆ.