ಮುಂಬೈ(ಪಿಟಿಐ): ಮುಂಬೈನಲ್ಲಿ ಆಯೋಜಿಸಲಾಗಿದ್ದ ಭಾರತದಲ್ಲಿ ತಯಾರಿಸಿ ಸಪ್ತಾಹದ ಸಾಂಸ್ಕೃತಿಕ ವೇದಿಕೆಗೆ ಭಾನುವಾರ ರಾತ್ರಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಯಾವುದೇ ಸಾವು, ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಬಾಲಿವುಡ್ ನಟ ಅಮಿತಾಬ್ ಬಚ್ಚನ್, ಅಮೀರ್ ಖಾನ್ ಉಪಸ್ಥಿತರಿದ್ದರು. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಲ್ಲರನ್ನೂ ತೆರವುಗೊಳಿಸಿ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಲಾವಣಿ ನೃತ್ಯ ನಡೆಯುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. 16 ಅಗ್ನಿ ಶಾಮಕ ಮತ್ತು ತುರ್ತು ಸೇವಾ ವಾಹನಗಳು ಹಾಗೂ ಆರು ನೀರಿನ ಟ್ಯಾಂಕರ್ ಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಸಾವು ನೋವು ಸಂಭವಿಸಿಲ್ಲ
ಬೆಂಕಿಗೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ, ಎಲ್ಲರನ್ನೂ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಬೆಂಕಿ ನಿಯಂತ್ರಣದಲ್ಲಿದೆ. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತಿಳಿಸಿದ್ದಾರೆ.