ಬೆಂಗಳೂರು: ಮುಂಬೈನಲ್ಲಿ 2011ರಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಮುಂಬೈ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಗಳು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಇಬ್ಬರು ಶಂಕಿತ ಉಗ್ರರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಸೋಮವಾರ ಬೆಳಿಗ್ಗೆ ನಗರಕ್ಕೆ ಬಂದ ಎಟಿಎಸ್ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಬಾಡಿವಾರೆಂಟ್ ಮೇಲೆ ಸೈಯದ್ ಲಕ್ನಾ (32), ಸದ್ದಾಂ ಖಾನ್ (28) ಎಂಬುವರನ್ನು ವಶಕ್ಕೆ ಪಡೆದು ಮುಂಬೈಗೆ ಕರೆದೊಯ್ದರು.
ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಜತೆ ನಂಟು ಹೊಂದಿದ ಆರೋಪದ ಮೇಲೆ ನಗರದ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಸೈಯದ್ ಇಸ್ಮಾಯಿಲ್ ಅಫಕ್ ಎಂಬಾತನನ್ನು ಬಂಧಿಸಿದ್ದರು. ಅಫಕ್, ವಿಚಾರಣೆ ವೇಳೆ ಸೈಯದ್ ಲಕ್ನಾ ಮತ್ತು ಸದ್ದಾಂ ಖಾನ್ ಬಗ್ಗೆ ಮಾಹಿತಿ ನೀಡಿದ್ದ. ಆ ಮಾಹಿತಿ ಆಧರಿಸಿ ಅವರಿಬ್ಬರನ್ನು ಬಂಧಿಸಲಾಗಿತ್ತು. ಸೈಯದ್ ಲಕ್ನಾ ಮತ್ತು ಸದ್ದಾಂ ಖಾನ್, ಐ.ಎಂ ಸಂಘಟನೆಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದ ಬಗ್ಗೆ ಮಾಹಿತಿ ಇದೆ. ಹೀಗಾಗಿ ಮುಂಬೈ ಎಟಿಎಸ್ ಸಿಬ್ಬಂದಿ ಆ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.