ಬದಾಯು (ಪಿಟಿಐ): ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರ ಹುಟ್ಟುಹಬ್ಬ ಪ್ರಯುಕ್ತ ಉಡುಗೊರೆ ಹಂಚುತ್ತಿದ್ದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬಿಸೌಲಿ ಪ್ರದೇಶದಲ್ಲಿ ಶನಿವಾರ ನಡೆದಿದೆ. ಶರಬ್ತಿ ದೇವಿ (52) ಮೃತಪಟ್ಟ ಮಹಿಳೆ.
‘ಮುಲಾಯಂ ಜನ್ಮದಿನದ ಅಂಗವಾಗಿ ಇಲ್ಲಿನ ಮದನ್ಲಾಲ್ ಕಾಲೇಜು ಆವರಣದಲ್ಲಿ ರವಿಕೆ ವಿತರಣೆ ನಡೆಯುತ್ತಿದ್ದ ಈ ವೇಳೆ ಈ ದುರ್ಘಟನೆ ನಡೆದಿದೆ’ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಲೆಂದ್ರ ಭೂಷಣ್ ಸಿಂಗ್ ಹೇಳಿದ್ದಾರೆ.
‘ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದಾಗ ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದರು’ ಎಂದು ಅವರು ತಿಳಿಸಿದ್ದಾರೆ.
ಮತ್ತೊಬ್ಬ ಮಹಿಳೆ ಇಲ್ಲಿನ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.