ತಂಜಾವೂರ್ (ತಮಿಳುನಾಡು) (ಪಿಟಿಐ): ಕರ್ನಾಟಕವು ಮೇಕೆದಾಟು ಬಳಿ ಕಾವೇರಿ ನದಿಗೆ ಎರಡು ಅಣೆಕಟ್ಟುಗಳನ್ನು ನಿರ್ಮಿಸಲು ಸಿದ್ಧಪಡಿಸಿರುವ ಯೋಜನೆಯನ್ನು ವಿರೋಧಿಸಿ ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದ ಸಾವಿರಾರು ರೈತರು ಮತ್ತು ವಿವಿಧ ರಾಜಕೀಯ ಪಕ್ಷಗಳು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ಎಂಡಿಎಂಕೆ ಪಕ್ಷದ ಮುಖಂಡ ವೈಕೊ ಅವರ ನೇತೃತ್ವದಲ್ಲಿ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಮತ್ತು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ರಾಜ್ಯದ ಭತ್ತದ ಕಣಜವಾದ ತಂಜಾವೂರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭತ್ತ ಬೆಳೆಯಲು ಕಾವೇರಿ ನೀರೇ ಆಧಾರ. ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸುವುದರಿಂದ ಭತ್ತದ ಬೇಸಾಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಅಣೆಕಟ್ಟೆಗಳನ್ನು ಕಟ್ಟಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
‘ಕಾವೇರಿಗೆ ತಡೆಯೊಡ್ಡಿದರೆ ಸುಮಾರು 5 ಕೋಟಿ ಜನರಿಗೆ ಕುಡಿ-ಯುವ ನೀರನ್ನು ನಿರಾಕರಿಸಿದಂತಾಗುತ್ತದೆ’ ಎಂದು ವೈಕೊ ಹೇಳಿದ್ದಾರೆ.
ತಿರುವರೂರ್ ರೈಲು ನಿಲ್ದಾಣದಲ್ಲಿ ಸೇರಿದ್ದ ಡಿಎಂಕೆ ಪಕ್ಷದ ಕಾರ್ಯಕರ್ತರು ಕರ್ನಾಟಕದ ಮೇಕೆದಾಟು ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸಿದರು. ನಾಗಪಟ್ಟಣಂ ಮತ್ತು ತಿರುಚಿನಾಪಲ್ಲಿಯಲ್ಲೂ ಪ್ರತಿಭಟನೆಗಳು ನಡೆದವು. ಪ್ರತಿಭಟನೆಯಿಂದ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು ಎಂದು ವರದಿ ತಿಳಿಸಿದೆ.