ಮುಂಬೈ (ಪಿಟಿಐ): ಮೋದಿ ಅವರು ಪ್ರಧಾನಿಯಾಗುವುದನ್ನು ತಪ್ಪಿಸುವ ಸಲುವಾಗಿ ಕಾಂಗ್ರೆಸ್ ಪಕ್ಷ ತೃತೀಯ ರಂಗದೊಂದಿಗೆ ಕೈ ಜೋಡಿಸಿ ಸರ್ಕಾರ ರಚಿಸುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಸುಳಿವು ನೀಡಿದ್ದಾರೆ.
ಚುನಾವಣಾ ನಂತರ ನಡೆಯಬಹುದಾದ ರಾಜಕೀಯ ಬೆಳವಣಿಗೆಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮುನ್ಸೂಚನೆ ನೀಡಿದ ಅವರು, ‘ನನಗೆ ನರೇಂದ್ರ ಮೋದಿಯವರು ಪ್ರಧಾನಿಯಾಗುತ್ತಾರೆ ಎಂದು ಅನಿಸುತ್ತಿಲ್ಲ. ಒಂದು ವೇಳೆ ಕಾಂಗ್ರೆಸ್ಗಿಂತ ಬಿಜೆಪಿ ಅಧಿಕ ಸ್ಥಾನಗಳನ್ನು ಪಡೆದರೂ, ಮೋದಿ ಅವರಿಗೆ ಪ್ರಾದೇಶಿಕ ಪಕ್ಷಗಳ ಬೆಂಬಲ ದೊರಕುವುದಿಲ್ಲ’ ಎಂದರು.
‘ಕಾಂಗ್ರೆಸ್ ತೃತೀಯ ರಂಗದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಸಾಧ್ಯತೆಯಿದೆ’ ಎಂದರು. ಗುರುವಾರ ರಾಜ್ಯದಲ್ಲಿ ನಡೆದ ಅಂತಿಮ ಹಂತದ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳ ಆಗಿರುವ ಬಗ್ಗೆ ಉತ್ತರಿಸಿದ ಅವರು, ‘ಮೊದಲ ಬಾರಿ ಮತದಾರರಿಗೆ ಅಧಿಕಾರದಲ್ಲಿರುವ ಪಕ್ಷದ ವಿರುದ್ಧ ಮತದಾನ ಮಾಡುವ ಪ್ರವೃತ್ತಿ ಇರುತ್ತದೆ. ಆದರೆ ಎಲ್ಲಿಯೂ ನನಗೆ ಮೋದಿ ಅಲೆ ಕಾಣುತ್ತಿಲ್ಲ’ ಎಂದು ಅವರು ಹೇಳಿದರು.
ಪ್ರಾದೇಶಿಕ ಪಕ್ಷಗಳು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರ ವಿವಾದಿತ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಚವಾಣ್, ‘ಪ್ರಾದೇಶಿಕ ಪಕ್ಷಗಳು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದರಿಂದ ರಾಜಕೀಯ ಅಸ್ಥಿರತೆ ಉಂಟಾಗುತ್ತದೆ. ಇದರ ಬಗ್ಗೆ ಚರ್ಚೆ ನಡೆಸುವ ಅಗತ್ಯವಿದೆ. ನಾನು ಅಥವಾ ಕಾಂಗ್ರೆಸ್ ಪಕ್ಷ ಇದರ ಬಗ್ಗೆ ನಿರ್ಧರಿಸಲು ಸಾಧ್ಯವಿಲ್ಲ. ಎಲ್ಲಾ ರಾಜಕೀಯ ಪಕ್ಷಗಳ ಸಲಹೆ ಪಡೆದು ಸಂವಿಧಾನಬದ್ಧವಾಗಿ ಈ ಬಗ್ಗೆ ಒಮ್ಮತದ ತಿದ್ದುಪಡಿ ಮಾಡಬೇಕು. ಪಕ್ಷಗಳ ಬೆಂಬಲವಿಲ್ಲದೇ ಏನೂ ಮಾಡಲು ಸಾಧ್ಯವಿಲ್ಲ’ ಎಂದರು. ಚವಾಣ್ ನಿಲುವಿಗೆ ಎನ್ಸಿಪಿ ವಿರೋಧ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಕೊನೆಯ ಯತ್ನ: ಬಿಜೆಪಿ ವ್ಯಂಗ್ಯ
ನವದೆಹಲಿ (ಪಿಟಿಐ): ಹೆಚ್ಚುವರಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಹಿಂದುಳಿದ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವುದಾಗಿ ಹೇಳಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಬಿಜೆಪಿ, ಕೆಲ ಮತಗಳನ್ನು ಸೆಳೆಯಲು ಕಾಂಗ್ರೆಸ್ ನಡೆಸಿದ ಕೊನೆಯ ಹತಾಶ ಪ್ರಯತ್ನ ಇದು ಎಂದು ಶುಕ್ರವಾರ ವ್ಯಂಗ್ಯವಾಡಿದೆ.
‘ಸೋಲುವ ಪಕ್ಷದ ಪೂರಕ ಪ್ರಣಾಳಿಕೆಯನ್ನು ಜನರು ನಂಬುವುದಿಲ್ಲ’ ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವಡೇಕರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಅಲ್ಪಸಂಖ್ಯಾತರ ಸಬಲೀಕರಣಕ್ಕಾಗಿ ಹಿಂದುಳಿದ ಮುಸ್ಲಿಮರಿಗೆ ಶೇ 4.5ರಷ್ಟು ಮೀಸಲು ಕಲ್ಪಿಸಲಾಗುವುದು ಎಂದು ಕಾಂಗ್ರೆಸ್ ತನ್ನ ಅಂತರ್ಜಾಲ ದಲ್ಲಿ ಭರವಸೆ ನೀಡಿರುವುದಕ್ಕೆ ಬಿಜೆಪಿಯಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.