ವಿಜಾಪುರ: ಕೂಡಗಿ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ದೇಶನದಂತೆ ಮ್ಯಾಜಿಸ್ಟಿರಿಯಲ್ ತನಿಖೆಗೆ ಸೋಮವಾರ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿಚಾರಣೆ ನಡೆಸಿ, ಲಿಖಿತ ಹೇಳಿಕೆ ಪಡೆಯಲಾಯಿತು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಸೋಮವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಘಟನೆಯಲ್ಲಿ ಗುಂಡೇಟು ತಗುಲಿ ತೀವ್ರವಾಗಿ ಗಾಯಗೊಂಡು ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುತ್ತಗಿಯ ಚಂದಪ್ಪ ಹಾಲಪ್ಪ ಶೇಡಿ, ಮಸೂತಿಯ ಸದಾಶಿವ ಮಲ್ಲಪ್ಪ ಗಣಾಚಾರಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲದ ಕಾರಣ ಶನಿವಾರವೇ ಅಲ್ಲಿಗೆ ತೆರಳಿ ಹೇಳಿಕೆ ಪಡೆಯಲಾಗಿದೆ. ಜತೆಗೆ ವಿಡಿಯೊ ಚಿತ್ರೀಕರಣ ಸಹ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರ ಹೇಳಿಕೆಗಳನ್ನು ಪಡೆಯಲಾಗಿದೆ ಎಂದು ಹೇಳಿದರು.
‘ಕಂದಾಯ, ಪೊಲೀಸ್ ಇಲಾಖೆ, ಎನ್ಟಿಪಿಸಿ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಒಟ್ಟು 35 ರಿಂದ 40 ಜನರ ವಿಚಾರಣೆ ನಡೆಸಲಾಗುವುದು. ಗುಂಡು ತಗುಲಿದವರಿಗೆ, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರಿಂದ ಜುಲೈ 30 ರಂದು ಹೇಳಿಕೆ ಪಡೆಯಲಾಗುವುದು. ಎನ್ಟಿಪಿಸಿ ಅಧಿಕಾರಿಗಳ ಹೇಳಿಕೆ ಪಡೆದ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ರೈತ ಮುಖಂಡರನ್ನು ಭೇಟಿಯಾಗಿ ಹೇಳಿಕೆ ಪಡೆಯಲಾಗುವುದು ಎಂದು ಹೇಳಿದರು.
ನಿಗದಿತ ಸಮಯದೊಳಗೆ ವಿಚಾರಣೆ ಪೂರ್ಣಗೊಳ್ಳದಿದ್ದರೆ ವಿಸ್ತರಿಸಲಾಗುವುದು. ಆಗಸ್ಟ್ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಾಗುವುದು ಎಂದು ತಿಳಿಸಿದರು.