ಚಿಕ್ಕಬಳ್ಳಾಪುರ: ಅನ್ಯಾಯ, ಅಕ್ರಮ ಮತ್ತು ಭ್ರಷ್ಟಾಚಾರ ವ್ಯಾಪಿಸುತ್ತಿರುವ ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಯುವಜನರೇ ಆಶಾಕಿರಣವಾಗಿದ್ದು, ಎಲ್ಲವನ್ನೂ ಅವರು ದಿಟ್ಟವಾಗಿ ಎದುರಿಸಿ ಮೆಟ್ಟಿ ನಿಲ್ಲಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಂಗಳವಾರ ನಡೆದ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸುಭದ್ರ ಮತ್ತು ಸುಂದರ ದೇಶ ನಿರ್ಮಿಸಬೇಕಿದ್ದರೆ, ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತೊಡೆದು ಹಾಕಬೇಕು ಎಂದರು.
ರಾಜಕಾರಣಿಗಳೇ ಜನರನ್ನು ಮತ್ತು ಇಡೀ ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಿದ್ದು, ಅವರಿಗೆ ತಕ್ಕ ಪಾಠ ಕಲಿಸಬೇಕಿದೆ. ಜಾಗೃತ ಯುವಜನರು ಎಚ್ಚೆತ್ತುಕೊಂಡು ಸಾಮಾಜಿಕ ಅವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದಲ್ಲಿ ಮಾತ್ರವೇ ಭ್ರಷ್ಟಾಚಾರರಹಿತ ಸಮಾಜ ನಿರ್ಮಿಸಬಹುದು ಎಂದು ಅವರು ತಿಳಿಸಿದರು.
ವರ್ಷಗಳು ಕಳೆದಂತೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕ್ಷೀಣಗೊಳಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದಕ್ಕೆಲ್ಲ ಪೂರ್ಣಪ್ರಮಾಣದಲ್ಲಿ ಕಡಿವಾಣ ಹಾಕಬೇಕಿದೆ. ಏನೂ ಮಾಡಿದರೂ ನಡೆದುಬಿಡುತ್ತದೆ ಎಂಬ ಮನೋಭಾವ ರಾಜಕಾರಣಿಗಳಲ್ಲಿ ಬಲವಾಗಿ ಬೇರೂರಿದೆ ಎಂದರು.
ದೇಶದ ಬಗ್ಗೆ ಅಭಿಮಾನ, ಕಾಳಜಿ ಮತ್ತು ಕಳಕಳಿ ಹೊಂದಿದವರಿಗೆ ಮಾತ್ರವೇ ಭದ್ರ ತಳಪಾಯದಡಿಯಲ್ಲಿ ಸುಭದ್ರ ದೇಶ ನಿರ್ಮಿಸಲು ಸಾಧ್ಯವಾಗುತ್ತದೆ. ಭವಿಷ್ಯದ ಭಾರತ ಹೇಗಿರಬೇಕು ಎಂಬ ಪರಿಕಲ್ಪನೆ ಇಂದಿನ ಯುವಜನರಲ್ಲಿ ಇರಬೇಕು ಮತ್ತು ಅವರೇ ದೇಶವನ್ನು ಸಮರ್ಥವಾಗಿ ಮುನ್ನಡೆಸಬೇಕು ಎಂದು ಅವರು ತಿಳಿಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ಅತಿಯಾದ ಹಾವಳಿಯಿಂದಾಗಿ ಕನ್ನಡ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ಎದುರಾಗಿದೆ. ಅತ್ಯುತ್ತಮ ಶಿಕ್ಷಣ ಸರ್ಕಾರಿ ಕನ್ನಡ ಶಾಲೆಗಳಲ್ಲಿಯೇ ಸಿಗುತ್ತದೆ ಎಂಬುದನ್ನು ಪೋಷಕರು ಅರಿಯಬೇಕು. ನಾನು ಸೇರಿದಂತೆ ದೇಶದ ಬಹುತೇಕ ಖ್ಯಾತನಾಮರು ಮತ್ತು ಮಹನೀಯರು ಸರ್ಕಾರಿ ಶಾಲೆಗಳಲ್ಲಿ ಕಲಿತುಕೊಂಡೇ ಜೀವನದಲ್ಲಿ ಯಶಸ್ಸು ಕಂಡಿದ್ದೇವೆ. ಸರ್ಕಾರಿ ಶಾಲೆಗಳು ತಮ್ಮದೇ ಆದ ಮಹತ್ವ ಕಾಯ್ದುಕೊಂಡಿವೆ ಎಂದು ಅವರು ತಿಳಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇದೇ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಜಿ.ಕೃಷ್ಣನ್ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ದಿವ್ಯಾ ವಿ.ಗೋಪಿನಾಥ್, ಸಾಹಿತಿ ಕೆ.ವೈ.ನಾರಾಯಣಸ್ವಾಮಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಸ್.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.