ನವದೆಹಲಿ (ಪಿಟಿಐ): ಯೂರಿಯಾ ಬೆಲೆ ಹೆಚ್ಚಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ಹೇಳಿದರು.
ರೈತರಿಗೆ ಅಗತ್ಯ ಇರುವಷ್ಟು ಯೂರಿಯಾವನ್ನು ಸಬ್ಸಿಡಿ ದರದಲ್ಲಿ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದರು.
ದೇಶದಲ್ಲಿ 31 ದಶಲಕ್ಷ ಟನ್ ರಸಗೊಬ್ಬರದ ಬೇಡಿಕೆ ಇದೆ. ಆದರೆ, 22 ದಶಲಕ್ಷ ಟನ್ ಮಾತ್ರ ಉತ್ಪಾದನೆ ಆಗುತ್ತಿದೆ. ಉಳಿದದ್ದನ್ನು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಪ್ರತಿ ತಿಂಗಳು ಅಗತ್ಯವಿರುವ ರಸಗೊಬ್ಬರ ಪ್ರಮಾಣದ ಬಗ್ಗೆ ಆಯಾ ರಾಜ್ಯಗಳ ಕೃಷಿ ಇಲಾಖೆಯಿಂದ ಮಾಹಿತಿ ಪಡೆದು ಬಿತ್ತನೆ ಕಾರ್ಯ ಆರಂಭವಾಗುವ ಮೊದಲೇ ಪೂರೈಸಲಾಗುತ್ತಿದೆ. ಎಲ್ಲಿಯೂ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಷ್ಯಾ, ಕೆನಡಾ ಸೇರಿದಂತೆ ವಿವಿಧ ರಾಷ್ಟ್ರಗಳ ಜಂಟಿ ಸಹಭಾಗಿತ್ವದಲ್ಲಿ ರಸಗೊಬ್ಬರ ಉತ್ಪಾದಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಇರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದರು.
ಓಮನ್, ಸೆನೆಗಲ್, ಜೋರ್ಡಾನ್, ಮೊರಾಕೊ ರಾಷ್ಟ್ರಗಳ ಜಂಟಿ ಸಹಭಾಗಿತ್ವದಲ್ಲಿ ಈಗಾಗಲೇ ರಸಗೊಬ್ಬರ ಉತ್ಪಾದಿಸಲಾಗುತ್ತಿದೆ ಎಂದು ತಿಳಿಸಿದರು.
ರಾಸಾಯನಿಕಗಳ ಬದಲು, ಸಾವಯವ ಗೊಬ್ಬರ ಬಳಸುವಂತೆ ರೈತರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು.