ಬೆಂಗಳೂರು: ‘2015–16ರ ಬಜೆಟ್ನಲ್ಲಿ ಬೆಂಗಳೂರು ನಗರಾಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು’ ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಅಭಿವೃದ್ಧಿಗೆ ವಾಹನ ದಟ್ಟಣೆ ಅಡ್ಡಿಯಾಗಿದೆ. ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ನಗರದ ನಾಲ್ಕೂ ವಲಯಗಳಲ್ಲಿ ಕನಿಷ್ಠ 25 ಮೇಲ್ಸೇತುವೆಗಳನ್ನು ನಿರ್ಮಿಸುವ ಅಗತ್ಯವಿದೆ’ ಎಂದರು.
ಬಿಬಿಎಂಪಿ, ಬೆಸ್ಕಾಂ, ಬಿಡಿಎ, ಬಿಎಂಟಿಸಿ ಮತ್ತು ಒಳಚರಂಡಿ ಮಂಡಳಿಗಳು ನಗರವನ್ನು ನರಕವನ್ನಾಗಿಸಿವೆ. ಸರ್ಕಾರಿ ಆಸ್ಪತ್ರೆಗಳು ಅವ್ಯವಸ್ಥೆಯ ಆಗರವಾಗಿವೆ. ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದರು.
ಸರ್ಕಾರದ ಗಮನಸೆಳೆಯುವ ನಿಟ್ಟಿನಲ್ಲಿ ಫೆ.28ರಂದು ವಿಧಾನಸೌಧದ ಮುಂದೆ ಈಡುಗಾಯಿ ಒಡೆಯುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.