ಮಂಗಳೂರು: ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಬಳಿಕ ‘ಫೇಸ್ಬುಕ್’ ಮೂಲಕ ಹಿಂಸೆಗೆ ಪ್ರಚೋದನೆ ನೀಡುವಂತೆ ಮತ್ತು ಹಿಂದೂ ಧರ್ಮದ ವಿರುದ್ಧ ಮಾತನಾಡುವವರ ಹತ್ಯೆಯ ಬೆದರಿಕೆ ಒಡ್ಡಿದ ಆರೋಪದ ಮೇಲೆ ರಾಮಸೇನೆ ಅಧ್ಯಕ್ಷ ಪ್ರಸಾದ್ ಅತ್ತಾವರನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಆರೋಪಿಯು ತನ್ನ ಫೇಸ್ಬುಕ್ ಖಾತೆ ಮೂಲಕ ಪ್ರಸಾರ ಮಾಡಿದ್ದ ಸಂದೇಶವನ್ನು ಗಮನಿಸಿದ್ದ ಬಂದರು ಠಾಣೆ ಪೊಲೀಸರು, ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದ್ದರು.
ಮಂಗಳೂರು ನಗರ ಸಿಸಿಬಿ ಪೊಲೀಸರು ಗುರುವಾರ ಆರೋಪಿಯನ್ನು ಪತ್ತೆಮಾಡಿ ವಶಕ್ಕೆ ಪಡೆದು, ಬಂದರು ಪೊಲೀಸರ ವಶಕ್ಕೆ ಒಪ್ಪಿಸಿದರು.
ಫೇಸ್ಬುಕ್ ಸಂದೇಶ ಕುರಿತು ಕೆಲಕಾಲ ವಿಚಾರಣೆ ನಡೆಸಿದ ಬಂದರು ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು.