ಬೆಂಗಳೂರು: ಒಂದು ರೂಪಾಯಿ ಮುಖಬೆಲೆಯ ರೆವಿನ್ಯೂ ಸ್ಟ್ಯಾಂಪ್ಗಳನ್ನು ಮತ್ತೆ ಜಾರಿಗೆ ತರಲು ಮಂಗಳವಾರ ಇಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಹೈಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದನ್ನು ಜಾರಿ ಮಾಡುತ್ತಿದ್ದು, ವಾರ್ಷಿಕ ರೂ. 10 ಕೋಟಿ ವರಮಾನ ನಿರೀಕ್ಷಿಸಲಾಗಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಸುದ್ದಿಗಾರರಿಗೆ ತಿಳಿಸಿದರು.
ಪ್ರವಾಸೋದ್ಯಮ ಸಂಸ್ಥೆ: ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಸಲುವಾಗಿ ರೂ. 100 ಕೋಟಿ ಮೂಲ ಬಂಡವಾಳದಲ್ಲಿ ‘ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ಸಂಸ್ಥೆ’ ಸ್ಥಾಪಿಸಲಾಗುತ್ತದೆ ಎಂದು ವಿವರಿಸಿದರು.
2024ರ ವೇಳೆಗೆ ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ರೂ. 73 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದೆ. ಇದರಲ್ಲಿ ಶೇ 50ರಷ್ಟು ಹಣ ಖಾಸಗಿ ಕ್ಷೇತ್ರದಿಂದಲೇ ಬರುತ್ತದೆ. ಈ ಕಾರಣದಿಂದ ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದರು.
ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ 1,467 ಎಕರೆ ಜಾಗ ಪ್ರವಾಸೋದ್ಯಮ ಅಭಿವೃದ್ಧಿಗಾಗಿಯೇ ಇದ್ದು, ಅದನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ನೀಡಲಾಗುವುದು ಎಂದು ತಿಳಿಸಿದರು.
ಇತರ ಪ್ರಮುಖ ತೀರ್ಮಾನಗಳು
*ವಿಶ್ವ ಬ್ಯಾಂಕ್ ನೆರವಿನೊಂದಿಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೂ. 120.06 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜನೆ ಅನುಷ್ಠಾನ. ಕೇಂದ್ರ ಸರ್ಕಾರ ಶೇ 75ರಷ್ಟು ಅನುದಾನ ನೀಡಲಿದೆ.