ನವದೆಹಲಿ: ರೈಲು ಪ್ರಯಾಣದ ಸುರಕ್ಷತೆಗೆ ಸಂಬಂಧಿಸಿದಂತೆ ಕಾಕೋಡ್ಕರ್ ಸಮಿತಿ ವರದಿ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ರೈಲ್ವೆ ಸಚಿವಾಲಯ ಮುಂದಾಗಿದೆ.
ತಿಂಗಳ ಒಳಗಾಗಿ ಸುರಕ್ಷಿತ ರೈಲು ಪ್ರಯಾಣ ಸಂಬಂಧ ನೀಲನಕ್ಷೆ ಸಿದ್ಧಪಡಿಸುವಂತೆ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಸೂಚಿಸಿದ್ದಾರೆ. ಸಚಿವರ ಆದೇಶದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ನೀಲನಕ್ಷೆ ಸಿದ್ಧಪಡಿಸಲು ಭರದ ಸಿದ್ಧತೆ ನಡೆಸಿದೆ.
ಸಮಿತಿಯ ಶಿಫಾರಸುಗಳನ್ನು ರೈಲ್ವೆ ಮಂಡಳಿ ಕೂಲಂಕಷವಾಗಿ ಪರಿಶೀಲಿಸುತ್ತಿದ್ದು, ತಿಂಗಳ ಒಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವಾಲಯ ಶುಕ್ರವಾರ ತಿಳಿಸಿದೆ. ಗುರುವಾರ ಇಲ್ಲಿ ಮುಕ್ತಾಯಗೊಂಡ ಎರಡು ದಿನಗಳ ರೈಲ್ವೆ ಮಂಡಳಿ ಸಭೆಯಲ್ಲಿ ವರದಿ ಶಿಫಾರಸುಗಳ ಅನುಷ್ಠಾನ ಕುರಿತು ಚರ್ಚಿಸಲಾಯಿತು.