ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಂಧಿಸಿರುವ ಯುವಕರನ್ನು ರೌಡಿಪಟ್ಟಿಗೆ ಸೇರಿಸಲು ಪೊಲೀಸರು ನಿರ್ಧರಿಸಿದ್ದಾರೆ.
‘ಪ್ರಕರಣ ಸಂಬಂಧ ಬಂಧಿಸಲಾಗಿರುವ ರೋಹಿತ್ ತಿವಾರಿ (22) ಮತ್ತು ಸಂತೋಷ್ಕುಮಾರ್ (21) ಎಂಬಾತನನ್ನು ವಿವೇಕನಗರ ಠಾಣೆಯ ರೌಡಿಪಟ್ಟಿಗೆ ಸೇರಿಸಲಾಗುತ್ತದೆ. ಒಂದು ವಾರದಲ್ಲಿ ಆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಅಲೋಕ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.
ಯುವತಿಯರನ್ನು ಚುಡಾಯಿಸುವ, ಅವರ ಜತೆ ಅನುಚಿತವಾಗಿ ವರ್ತಿಸುವ ಮತ್ತು ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಂತಹ ಕೃತ್ಯ ಎಸಗುವ ಆರೋಪಿಗಳನ್ನು ರೌಡಿಪಟ್ಟಿಗೆ ಸೇರಿಸಲಾಗುತ್ತದೆ ಎಂದು ಹೇಳಿದ್ದಾರೆ.
ರೌಡಿಪಟ್ಟಿಯಲ್ಲಿರುವ ಆರೋಪಿಗಳ ಮೇಲೆ ನಿರಂತರ ಕಣ್ಗಾವಲು ಇಡಲಾಗುತ್ತದೆ. ಅಲ್ಲದೇ, ಅವರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.