ಬೆಂಗಳೂರು: ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಲು ನಿರಾಕರಿಸಿರುವ ಪ್ರಕರಣಗಳ ಬಗ್ಗೆ ವರದಿ ನೀಡುವಂತೆ ಉಡುಪಿ, ಕೊಡಗು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಸೂಚಿಸಿದ್ದಾರೆ.
ಸಂತ್ರಸ್ತ ರೈತ ಕುಟುಂಬಗಳಿಗೆ ಪರಿಹಾರ ನಿರಾಕರಿಸಿದ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ಅವರು ಮುಖ್ಯಕಾರ್ಯದರ್ಶಿ ಅವರಿಗೆ ಇತ್ತೀಚೆಗೆ ದೂರು ನೀಡಿದ್ದರು.
ಉಡುಪಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರಾದ ರಾಮ ಕುಲಾಲ, ಮಹೇಶ ಪೂಜಾರಿ, ವಿಠಲ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿ ಅವರ ಕುಟುಂಬಗಳಿಗೆ ಪರಿಹಾರ ನಿರಾಕರಿಸಿದ ಉಪವಿಭಾಗಾಧಿಕಾರಿ ಚಾರುಲತಾ ಸೋಮನ್ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕ ಆಂಟೊನಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದರು. ಕೊಡಗು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲೂ ರೈತ ಕುಟುಂಬಗಳಿಗೆ ಪರಿಹಾರ ನಿರಾಕರಿಸಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.