ನವದೆಹಲಿ (ಐಎಎನ್ಎಸ್): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾಧ್ರಾ ಭಾಗಿಯಾಗಿದ್ದಾರೆ ಎನ್ನಲಾದ ಭೂಹಗರಣಗಳು ಸೇರಿದಂತೆ ಹರಿಯಾಣಾದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ನೀಡಲಾದ ಪರವಾನಗಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಚುನಾವಣೆ ನಂತರ ವಿಚಾರಣೆ ನಡೆಸುವುದಾಗಿ ದೆಹಲಿ ಹೈಕೋರ್ಟ್ ತಿಳಿಸಿದೆ.
ಈ ಹಗರಣಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಎಂ. ಎಲ್. ಶರ್ಮಾ, ಚುನಾವಣೆ ನಂತರವಷ್ಟೇ ಅರ್ಜಿ ವಿಚಾರಣೆ ಆರಂಭಿಸಬೇಕು. ಇಲ್ಲದಿದ್ದಲ್ಲಿ ಅದು ಬಿಜೆಪಿ ಅಥವಾ ಕಾಂಗ್ರೆಸ್ಗೆ ಲಾಭ ಮಾಡಿಕೊಡುವ ಸಾಧ್ಯತೆ ಇದೆ ಎಂದರು. ಅವರ ಮನವಿ ಪುರಸ್ಕರಿಸಿದ ಕೋರ್ಟ್ ಮೇ 13ಕ್ಕೆ ವಿಚಾರಣೆ ನಿಗದಿಪಡಿಸಿತು.