ನವದೆಹಲಿ (ಪಿಟಿಐ): ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಿರುದ್ಧ ಎಐಎಡಿಎಂಕೆ ನಾಯಕಿ ಜೆ.ಜಯಲಲಿತಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗಳ ಸಂಬಂಧ ಕ್ರಮ ಜರುಗಿಸುವುದಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.
ದಂಡನಾ ಕಾನೂನುಗಳಲ್ಲಿ ಅಪರಾಧ ಮಾನನಷ್ಟದ ಅವಕಾಶವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ಆಧಾರದಲ್ಲಿ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಯು.ಯು. ಲಲಿತ್ ಅವರನ್ನೊಳಗೊಂಡ ಪೀಠ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳಿಗೆ ನೋಟಿಸ್ ನೀಡಿತು.
ಸ್ವಾಮಿ ವಿರುದ್ಧ ಚೆನ್ನೈನ ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಎಲ್ಲಾ ಐದು ಮಾನನಷ್ಟ ಮೊಕದ್ದಮೆಗಳ ವಿಚಾರಣೆಗೂ ಸುಪ್ರೀಂ ಕೋರ್ಟ್ ತಡೆ ನೀಡಿತು. ಮಾನನಷ್ಟ ಮೊಕದ್ದಮೆ ಹೂಡುವ ಅವಕಾಶವು ವ್ಯಕ್ತಿಯ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರುವ ಕಾರಣ ಅದು ಅಸಾಂವಿಧಾನಿಕವಾಗುತ್ತದೆ ಎಂದು ಸ್ವಾಮಿ ವಾದಿಸಿದರು.
ಭಾರತೀಯ ದಂಡ ಸಂಹಿತೆ (ಐಪಿಸಿ ಸೆಕ್ಷನ್) 499 ಮತ್ತು 500 ಹಾಗೂ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕ್ರಿಯಾ ಸಂಹಿತೆ 199 (2) ಎಷ್ಟು ನ್ಯಾಯಸಮ್ಮತ ಎಂದೂ ಸ್ವಾಮಿ ಪ್ರಶ್ನಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಜಯಲಲಿತಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸ್ವಾಮಿ ಅವರ ವಿರುದ್ಧ ಐದು ಮಾನನಷ್ಟ ಮೊಕದ್ದಮೆಗಳನ್ನು ಹೂಡಿತ್ತು.