ಬಳ್ಳಾರಿ: ‘ರಾಜ್ಯದಲ್ಲಿ ಬೆಂಗಳೂರು ನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು.
ನಗರದಲ್ಲಿ ಮಂಗಳವಾರ ನಡೆದ ಆಯೋಗದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ 2,200 ಹಾಗೂ ಬಳ್ಳಾರಿಯಲ್ಲಿ 2,018 ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ ಎಂದು ಮಾಹಿತಿ ನೀಡಿದರು.
ಮಕ್ಕಳು ಶಾಲೆಯಿಂದ ದೂರ ಇರಲು ಬಡತನವೇ ಪ್ರಮುಖ ಕಾರಣ. ಜೊತೆಗೆ ನಮ್ಮ ಶಿಕ್ಷಣ ಮತ್ತು ಆಡಳಿತ ವ್ಯವಸ್ಥೆ ಕೂಡ ಇದಕ್ಕೆ ಕಾರಣ. ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸೇರಿದಂತೆ ಇತರ ಸೌಲಭ್ಯಗಳು ಇಲ್ಲದಿರುವುದು ಆಯೋಗದ ಗಮನಕ್ಕೆ ಬಂದಿದೆ. ಈ ಎಲ್ಲ ಲೋಪದೋಷಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಶಿಕ್ಷಣದ ಹಕ್ಕಿನ ಮೇಲೆ ನಿಗಾ ವಹಿಸುವ ಕೆಲಸ ಮಾಡುತ್ತಿದ್ದೇವೆ. ಮಕ್ಕಳು ಶಾಲೆಗೆ ಹೋಗದಿದ್ದರೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಈ ರೀತಿ ಉಲ್ಲಂಘನೆ ಆಗಬಾರದು ಎನ್ನುವ ಕಾರಣದಿಂದಲೇ ‘ಶಾಲೆ ಕಡೆ ನನ್ನ ನಡೆ’ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.