ಬೆಂಗಳೂರು: ಏಳನೇ ವೇತನ ಆಯೋಗದ ಶಿಫಾರಸುಗಳನ್ನು 2014ರ ಜನವರಿಯಿಂದಲೇ ಅನ್ವಯ-ವಾಗುವಂತೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕೇಂದ್ರ ಸರ್ಕಾರಿ ನೌಕರರು ಮತ್ತು ಕೆಲಸಗಾರರ ಸಮನ್ವಯ ಸಮಿತಿ ಸದಸ್ಯರು ನಗರದ ಪುರಭವನದ ಎದುರು ಶುಕ್ರವಾರ ಧರಣಿ ನಡೆಸಿದರು.
ಅಗತ್ಯ ವಸ್ತುಗಳ ಬೆಲೆ ಸಾಕಷ್ಟು ಏರಿಕೆಯಾಗಿದೆ. ಆದರೆ, ವೇತನ ಪ್ರಮಾಣ ಕಡಿಮೆ ಇರುವುದರಿಂದ ಜೀವನ ನಿರ್ವಹಣೆಗೆ ತೊಂದರೆ-ಯಾಗುತ್ತಿದೆ. ಆದ ಕಾರಣ ಅಗತ್ಯ ವಸ್ತುಗಳ ಬೆಲೆಗೆ ಅನುಗುಣವಾಗಿ ವೇತನ ಹೆಚ್ಚಿಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.
‘ಬ್ಯಾಂಕ್ ಮತ್ತು ಜೀವ ವಿಮಾ ನೌಕರರಿಗೆ ಐದು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡಲಾಗುತ್ತಿದೆ. ಆದರೆ, ಇತರೆ ಕೇಂದ್ರ ಸರ್ಕಾರಿ ನೌಕರರಿಗೆ 10 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡಲಾಗುತ್ತಿದೆ. ಅಲ್ಲದೇ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ವೇತನ ಪರಿಷ್ಕರಣೆಯಾಗುತ್ತಿಲ್ಲ’ ಎಂದು ಸಮಿತಿಯ ಅಧ್ಯಕ್ಷ ಎಸ್.ರಾಧಾಕೃಷ್ಣ ಹೇಳಿದರು. ಗ್ರಾಮೀಣ ಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂಚೆ ನೌಕರರನ್ನು ಕಾಯಂಗೊಳಿಸಬೇಕು. ಮಧ್ಯಂತರ ವೇತನ ಪರಿಹಾರ ಕೊಡಬೇಕು ಎಂದು ಧರಣಿನಿರತರು ಮನವಿ ಮಾಡಿದರು.