ಬೆಂಗಳೂರು: ಕಳಸಾ ಬಂಡೂರಿ ನಾಲಾ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕನರಗುಂದದ ಕಳಸಾ – ಬಂಡೂರಿ ಹೋರಾಟ ಕೇಂದ್ರ ಸಮಿತಿ ಸದಸ್ಯರು ಸೋಮವಾರ ಸ್ವಾತಂತ್ರ್ಯ ಉದ್ಯಾನದ ಬಳಿ ಧರಣಿ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿ, ‘ಹುಬ್ಬಳ್ಳಿ – ಧಾರವಾಡ ಮಹಾನಗರ ಸೇರಿದಂತೆ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಪಟ್ಟಣಗಳು ಹಾಗೂ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಕಳಸಾ ಬಂಡೂರಿ ಯೋಜನೆಯೊಂದೇ ಶಾಶ್ವತ ಪರಿಹಾರ.
ಆದರೆ, ಸರ್ಕಾರಗಳ ನಿಷ್ಕಾಳಜಿ ಮತ್ತು ಕಾನೂನು ಇಲಾಖೆಯ ನಿರ್ಲಕ್ಷ್ಯದಿಂದ ಈ ಯೋಜನೆ ಕುರಿತ ವ್ಯಾಜ್ಯ ಮಹದಾಯಿ ನ್ಯಾಯಾಧೀಕರಣದಲ್ಲಿ ನನೆಗುದಿಗೆ ಬಿದ್ದಿದೆ’ ಎಂದರು. ‘ಕಳಸಾ ಹಳ್ಳದಿಂದ ನೈಸರ್ಗಿಕವಾಗಿ ಹರಿದು ಬರುತ್ತಿದ್ದ ನೀರಿಗೆ ತಡೆ ಗೋಡೆ ಕಟ್ಟಲು ಮಹಾದಾಯಿ ನ್ಯಾಯಾಧೀಕರಣ ಮಧ್ಯಂತರ ಆದೇಶ ನೀಡಿರುವುದರಿಂದ ಈ ಭಾಗದ ಜನತೆಗೆ ತುಂಬಾ ಅನ್ಯಾಯವಾಗಿದೆ.
ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಗೊಳಿಸಲು ತುರ್ತು ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು. ಸಮಿತಿ ಸಂಚಾಲಕ ವಿಕಾಸ ಸೊಪ್ಪಿನ ಅವರು ಮಾತನಾಡಿ, ‘ಅಭಿವೃದ್ಧಿಯ ವಿಚಾರದಲ್ಲಿ ಸರ್ಕಾರ ಜಿಲ್ಲೆಗಳ ನಡುವೆ ತಾರತಮ್ಯ ಮಾಡುವುದು ಸರಿಯಲ್ಲ. ಉತ್ತರ ಕರ್ನಾಟಕದ ರಾಜಕೀಯ ಮುಖಂಡರ ಇಚ್ಛಾಶಕ್ತಿಯ ಕೊರತೆಯಿಂದಾಗಿ ಈ ಯೋಜನೆ ವಿಳಂಬವಾಗಿದೆ.
ಮೇಕೆದಾಟು ಅಣೆಕಟ್ಟೆ ನಿರ್ಮಾಣ ಯೋಜನೆ ಬಗ್ಗೆ ಪ್ರಧಾನಿಗೆ ಮನವರಿಕೆ ಮಾಡಿಕೊಡಲು ದೆಹಲಿಗೆ ತೆರಳುವ ಸರ್ವಪಕ್ಷ ನಿಯೋಗವು ಕಳಸಾ ಬಂಡೂರಿ ಯೋಜನೆಯ ವಿವಾದವನ್ನು ಇತ್ಯರ್ಥಪಡಿಸಲು ಪ್ರಧಾನಿಯವರು ಮಧ್ಯೆ ಪ್ರವೇಶಿಸುವಂತೆ ಒತ್ತಾಯಿಸಬೇಕು’ ಎಂದು ಹೇಳಿದರು.